ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಬಂಜಾರ ಜನಾಂಗವು ತನ್ನ ವಿಶಿಷ್ಟ ಭಾಷೆ ಹಾಗೂ ಸಂಸ್ಕೃತಿಯಿಂದ ಶ್ರೀಮಂತವಾಗಿದೆ. ಸದಾ ಒಳಿತನ್ನು ಬಯಸುವ ಬಂಜಾರ ಸಮುದಾಯದ ಚಿಂತನೆ ಅನುಕರಣೀಯ ಎಂದು ರೋಣ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಹೇಳಿದರು.
ಪಟ್ಟಣದ ಬಂಜಾರ ಸಮಾಜದ ವತಿಯಿಂದ ಜಕ್ಕಲಿ ರಸ್ತೆಯ ಆಶ್ರಯ ಕಾಲೋನಿಯಲ್ಲಿ ನಡೆದ ಸಂತ ಶ್ರೀ ಸೇವಾಲಾಲ್ ಮಾಹಾರಾಜರ 287ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಂಬಾಣಿ ಸಮಾಜದವರು ಶ್ರಮಜೀವಿ, ಪ್ರಾಮಾಣಿಕತೆಗೆ ಹೆಸರುವಾಸಿಯಾದವರು. ಸಂತ ಸೇವಾಲಾಲ್ರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ನರೇಗಲ್ಲ ಪಟ್ಟಣದ ಬಂಜಾರ ಜನಾಂಗದ ಅಭಿವೃದ್ಧಿಗಾಗಿ ಶಾಸಕರ ಗಮನಕ್ಕೆ ತಂದು ಅಗತ್ಯತೆಗಳ ಪೂರೈಕೆಗೆ ಪ್ರಯತ್ನಿಸುತ್ತೇನೆ ಎಂದರು.
ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಅಕ್ಷಯ ಐ. ಪಾಟೀಲ ಮಾತನಾಡಿ, ಈ ಸಮುದಾಯದ ಸಂಸ್ಕೃತಿ ಶ್ರೀಮಂತವಾಗಿದೆ. ಇಂದಿಗೂ ತಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಸಾಗುತ್ತಿರುವ ಈ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ಆಶೀರ್ವಚನ ನೀಡಿದ ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು, ಸೇವಾಲಾಲ್ ಮಹಾರಾಜರು ಈ ಸಮುದಾಯವನ್ನು ಸತ್ಯದ ಹಾದಿಯಲ್ಲಿ ಮುನ್ನಡೆಸಿದರು. ಅವರು ಸಮಾಜದ ಏಳಿಗೆಗೆ ನಿಸ್ವಾರ್ಥ ಸೇವೆ ಸಲ್ಲಿಸಿದ ಮಹಾನ್ ಸಂತರು. ಬಡವರಿಗಾಗಿ, ಸಮಾಜದ ಹಿತಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ದಾರ್ಶನಿಕರು ಎಂದರು.
ಕೊಡಗಲಿಯ ಸಂತೋಷ ಮಹಾರಾಜ್ ಮತ್ತು ನಿವೃತ್ತ ಶಿಕ್ಷಕ ತಾರಾಸಿಂಗ್ ರಾಠೋಡ ವಿಶ್ವ ಶಾಂತಿಗಾಗಿ ಭೋಗ್ ಸಮರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರದ ಸಾಧಕರನ್ನು, ದಾನಿಗಳನ್ನು ಸನ್ಮಾನಿಸಲಾಯಿತು. ಮುಖಂಡರಾದ ನಿಂಗನಗೌಡ ಲಕ್ಕನಗೌಡ್ರ, ವೀರನಗೌಡ ಪಾಟೀಲ, ಅಲ್ಲಾಬಕ್ಷಿ ನದಾಫ್, ಮೈಲಾರಪ್ಪ ಚಳ್ಳಮರದ, ಹನಮಂತಪ್ಪ ಅಬ್ಬಿಗೇರಿ, ಕಳಕನಗೌಡ ಪೊಲೀಸ್ ಪಾಟೀಲ, ಮೃತ್ಯುಂಜಯ ಧಡೇಸೂರಮಠ, ಉದ್ಯಮಿ ಬಸವರಾಜ ವಂಕಲಕುಂಟಿ, ಕುಮಾರಸ್ವಾಮಿ ಕೋರಧಾನ್ಯಮಠ, ದಾದಾಸಾಬ್ ನದಾಫ್, ಗುಡದಪ್ಪ ಗೋಡಿ, ಸದ್ದಾಂ ನಶೇಖಾನ್, ದೇವಕ್ಕ ರಾಠೋಡ ಇದ್ದರು. ಚಂದ್ರು ರಾಠೋಡ ನಿರ್ವಹಿಸಿದರು.
ಕೊಪ್ಪಳ ಬಹದ್ದೂರಬಂಡಾ ಬಂಜಾರ ಪೀಠದ ಗುರು ಗೋಸಾಯಿಬಾವ ಸ್ವಾಮೀಜಿ ಮಾತನಾಡಿ, ಬಂಜಾರ ಸಮುದಾಯದ ಪವಾಡ ಪುರುಷ ಸೇವಾಲಾಲ್ ಸಮಾಜದಲ್ಲಿನ ಮೌಢ್ಯತೆ ತೊಡೆದು ಹಾಕಿದ ಸಂತರು. ಪ್ರಕೃತಿಯಲ್ಲಿನ ಪ್ರಾಣಿ-ಪಕ್ಷಿಗಳೊಂದಿಗೆ ಸಂಭಾಷಣೆ ನಡೆಸುತ್ತಿದ್ದ ಅವರು ಸಕಲ ಜೀವಜಂತುಗಳಿಗೆ ಒಳ್ಳೆಯದಾಗಲಿ ಎಂದು ಬಯಸಿದರು ಎಂದರು.



