ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ನಡೆಯುವ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಯಿತು.
17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು Jan 29ರಿಂದ Feb 6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ನಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉತ್ಸವವನ್ನು ಉದ್ಘಾಟಿಸಲಿದ್ದಾರೆ.
ಈ ಬಾರಿ ಚಲನಚಿತ್ರೋತ್ಸವದಲ್ಲಿ 60 ದೇಶಗಳಿಂದ ಆಯ್ಕೆಯಾದ 200 ಸಿನಿಮಾಗಳು ಪ್ರದರ್ಶನವಾಗಲಿದ್ದು, ಒಟ್ಟು 400 ಪ್ರದರ್ಶನಗಳು ನಡೆಯಲಿವೆ. ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ಸಿನಿಮಾಗಳ ಪ್ರದರ್ಶನವೂ ಉತ್ಸವದ ವಿಶೇಷ ಆಕರ್ಷಣೆಯಾಗಲಿದೆ.
ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು ಸೇರಿದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸುವ ವಿಶೇಷ ವಿಭಾಗವನ್ನು ಆಯೋಜಿಸಲಾಗುತ್ತದೆ. ಮಹಿಳೆಯರ ಸಬಲೀಕರಣವನ್ನು ಥೀಮ್ ಆಗಿ ರೂಪಿಸುವ ಚಿಂತನೆ ಇದ್ದು, ಶೀಘ್ರದಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.
ಲೂಲು ಮಾಲ್ನಲ್ಲಿರುವ ಸಿನಿ ಪೊಲಿಸ್ನ 11 ಸ್ಕ್ರೀನ್ಗಳಲ್ಲಿ ಎಲ್ಲಾ ಚಿತ್ರ ಪ್ರದರ್ಶನ ನಡೆಯಲಿದೆ. ಇದುವರೆಗೆ 110 ಚಿತ್ರಗಳಿಂದ ಅರ್ಜಿಗಳು ಬಂದಿದ್ದು, Dec 31 ಕೊನೆಯ ದಿನಾಂಕವಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಟ ನಿರಾಕರಣೆ ಸಂಬಂಧ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಗೃಹ ಸಚಿವರು ಸಮಿತಿ ರಚನೆ ಮಾಡಿದ್ದಾರೆ. ನ್ಯಾ. ಕುನ್ಹಾ ವರದಿ ಶಿಫಾರಸುಗಳನ್ನು ಜಾರಿ ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಈ ಸಭೆಯಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲಾ, ಹಿರಿಯ ನಟಿ ಜಯಮಾಲ, ಸಾರಾ ಗೋವಿಂದ್ ಸೇರಿದಂತೆ ಚಿತ್ರೋದ್ಯಮದ ಗಣ್ಯರು ಉಪಸ್ಥಿತರಿದ್ದರು.



