ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಸಿಕ್ಕಿಬಿದ್ದ ಘಟನೆ ನಡೆದಿದೆ.
ಕಳೆದ ಮೂರು ವರ್ಷಗಳಿಂದ ಚಿರತೆ ಹಾವಳಿಯಿಂದ ಗ್ರಾಮಸ್ಥರು ತೀವ್ರ ಸಮಸ್ಯೆ ಎದುರಿಸುತ್ತಿದ್ದರು. ಊರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದು, ಹಲವು ಜಾನುವಾರುಗಳ ಮೇಲೆ ದಾಳಿ ನಡೆಸಿದ್ದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.
ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಜಮೀನಿಗೆ ತೆರಳಲು ಹಾಗೂ ಹೊರಗೆ ಓಡಾಡಲು ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಗ್ರಾಮಸ್ಥರ ಮನವಿಯ ಮೇರೆಗೆ ಅರಣ್ಯ ಇಲಾಖೆ ಬೋನು ಅಳವಡಿಸಿತ್ತು.
ಇದೀಗ ಚಿರತೆ ಬೋನಿಗೆ ಬಿದ್ದಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಈ ಭಾಗದಲ್ಲಿ ಇನ್ನೂ ಎರಡು ಚಿರತೆಗಳು ಇರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಉಳಿದ ಚಿರತೆಗಳನ್ನೂ ಕೂಡ ಶೀಘ್ರವಾಗಿ ಸೆರೆಹಿಡಿದು ಗ್ರಾಮಸ್ಥರಿಗೆ ರಕ್ಷಣೆ ಒದಗಿಸಬೇಕು ಎಂದು ಅರಣ್ಯ ಇಲಾಖೆಯನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ.



