ಹಾವೇರಿ: ನಗರ ಪ್ರದೇಶಗಳಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ದಾಳಿ ಹೆಚ್ಚಾಗುತ್ತಿದ್ದು, ಜನರು ಭೀತಿಯ ವಾತಾವರಣದಲ್ಲಿ ಬದುಕುವಂತಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿಯೇ ಹುಚ್ಚು ನಾಯಿಯೊಂದು ಅಟ್ಟಹಾಸ ಮೆರೆದಿದ್ದು, 15ಕ್ಕೂ ಅಧಿಕ ಜನರಿಗೆ ದಾಳಿ ಮಾಡಿ ಗಾಯಗೊಳಿಸಿದೆ. ವಿಶೇಷವಾಗಿ ಬಾಲಕನ ಮೇಲೆ ನಡೆದ ಡೆಡ್ಲಿ ಅಟ್ಯಾಕ್ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಂಗಳೂರು ಬಳಿಕ ಜಿಲ್ಲೆ ಹಾಗೂ ಪಟ್ಟಣಗಳಲ್ಲಿಯೂ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಣೇಬೆನ್ನೂರು ನಗರದ ಉಮಾಶಂಕರ್ ಹಾಗೂ ಗೌರಿಶಂಕರ ನಗರ ಪ್ರದೇಶಗಳಲ್ಲಿ ಬೀದಿ ನಾಯಿಗಳ ದಾಳಿ ನಿರಂತರವಾಗಿ ನಡೆಯುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಸಂಜೆಯ ವೇಳೆ ಮನೆಯ ಮುಂದೆ ನಿಂತಿದ್ದ ಬಾಲಕನ ಮೇಲೆ ಏಕಾಏಕಿ ಶ್ವಾನಗಳು ದಾಳಿ ನಡೆಸಿದ್ದು, ಅದೃಷ್ಟವಶಾತ್ ಬಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ.
ಇದೇ ನಾಯಿಗಳು ರಸ್ತೆಯಲ್ಲಿ ಓಡಾಡುತ್ತಿದ್ದ ಮಹಿಳೆಯರು, ವಯೋವೃದ್ಧರು ಹಾಗೂ ಮಕ್ಕಳ ಮೇಲೂ ದಾಳಿ ನಡೆಸಿ ಗಾಯಗೊಳಿಸಿವೆ. ಹಾವೇರಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ದಾಳಿ ಮುಂದುವರಿದಿದ್ದರೂ, ನಗರಸಭೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಶಾಸಕ ಪ್ರಕಾಶ ಕೋಳಿವಾಡ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ ಹೇಳಿ, ಸೂಕ್ತ ಚಿಕಿತ್ಸೆ ಒದಗಿಸುವ ಭರವಸೆ ನೀಡಿದ್ದಾರೆ. ಈ ಮಧ್ಯೆ ಜನರ ಮೇಲೆ ದಾಳಿ ಮಾಡುತ್ತಿರುವ ಶ್ವಾನಗಳನ್ನು ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.



