ಬೆಂಗಳೂರು: ಜೀವಂತವಿರುವ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣಪತ್ರ ನೀಡಿರುವುದನ್ನು ರದ್ದುಪಡಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಮುಂದಿನ ವಿಚಾರಣೆಯ ವೇಳೆಗೆ ಮರಣ ಪ್ರಮಾಣಪತ್ರವನ್ನು ರದ್ದುಪಡಿಸಿರುವ ಬಗ್ಗೆ ಹಿಂಬರಹ ಸಲ್ಲಿಸಬೇಕು ಎಂದು ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ)ಯ ಜನನ ಮತ್ತು ಮರಣ ನೋಂದಣಾಧಿಕಾರಿಗೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೆಂಗಳೂರಿನ ಚಿಕ್ಕಪೇಟೆ ವಲಯ ಕಚೇರಿಯಿಂದ ನೀಡಲಾದ ತಾತ್ಕಾಲಿಕ ಮರಣ ಪ್ರಮಾಣಪತ್ರವನ್ನು ರದ್ದುಪಡಿಸಲು ನಿರ್ದೇಶಿಸಬೇಕೆಂದು ಡಿ. ಮೆಹಬೂಬ್ ಬಾಷಾ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಬದುಕಿರುವ ವ್ಯಕ್ತಿಯ ಹೆಸರಿನಲ್ಲಿ ನೀಡಿರುವ ಮರಣ ಪ್ರಮಾಣಪತ್ರವನ್ನು ಹಿಂಪಡೆಯದಿರುವುದರಿಂದ ಅರ್ಜಿದಾರರು ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಹೋಗುವಂತಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.
ಜನನ ಮತ್ತು ಮರಣಗಳ ನೋಂದಣಾಧಿಕಾರಿ ಬುಧವಾರದೊಳಗೆ ಮರಣ ಪ್ರಮಾಣಪತ್ರ ರದ್ದುಪಡಿಸಿರುವ ವರದಿ ಸಲ್ಲಿಸಬೇಕು. ವಿಫಲವಾದಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.
ಇದಕ್ಕೂ ಮೊದಲು ಮರಣ ಪ್ರಮಾಣಪತ್ರವನ್ನು ರದ್ದುಪಡಿಸಲು ಆದೇಶ ನೀಡಿದ್ದರೂ ಅದನ್ನು ಪಾಲಿಸದಿರುವ ಬಗ್ಗೆ ಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ, ಏಕೆ ದಂಡ ವಿಧಿಸಬಾರದು ಎಂದು ವಿಚಾರಿಸಿದೆ.
ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಜಿಬಿಎ ಜನನ-ಮರಣ ನೋಂದಣಾಧಿಕಾರಿ, ಕಿದ್ವಾಯಿ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ, ಚಿಕ್ಕಪೇಟೆ ವೈದ್ಯಾಧಿಕಾರಿ ಹಾಗೂ ಜಿಬಿಎ ಸಾಂಖ್ಯಿಕ ವಿಭಾಗದ ಜಂಟಿ ನಿರ್ದೇಶಕರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವಿಚಾರಣೆಯ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಜೀವಂತವಾಗಿದ್ದರೂ ಮರಣ ಪ್ರಮಾಣಪತ್ರ ನೀಡಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅವರ ಪ್ಯಾನ್ ಮತ್ತು ಆಧಾರ್ ಕಾರ್ಡ್ ಸೇರಿದಂತೆ ಎಲ್ಲಾ ದಾಖಲೆಗಳಿದ್ದರೂ, ಆಧಾರ್ ಕಾರ್ಡ್ ಪಡಿತರ ಚೀಟಿಗೆ ಸಂಪರ್ಕಗೊಂಡಿರುವ ಕಾರಣದಿಂದ ಪಡಿತರ ಪಡೆಯಲು ಸಾಧ್ಯವಾಗಿಲ್ಲ ಎಂದು ವಿವರಿಸಿದರು.



