ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ರಾಜಕೀಯ ತಾಪಮಾನ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಎಐಡಿಎಂಕೆ-ಬಿಜೆಪಿ ಮೈತ್ರಿಯನ್ನು ಟೀಕಿಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ಎಐಡಿಎಂಕೆ ಪಕ್ಷವು ಮೋದಿಯವರೊಂದಿಗೆ ಕೈಜೋಡಿಸಿರುವುದನ್ನು ಪ್ರಶ್ನಿಸಿ, ಸಮಾನತೆ ಮತ್ತು ನ್ಯಾಯದ ಮೌಲ್ಯಗಳನ್ನು ಬಿಜೆಪಿ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು. ಈ ವೇಳೆ ಬಳಸಿದ ಪದಪ್ರಯೋಗ ತೀವ್ರ ಪ್ರತಿಕ್ರಿಯೆ ಹುಟ್ಟಿಸಿದೆ.
ಈ ಹೇಳಿಕೆಯನ್ನು ಬಿಜೆಪಿ ಖಂಡಿಸಿದ್ದು, ರಾಜಕೀಯ ಶಿಷ್ಟಾಚಾರ ಮೀರಲಾಗಿದೆ ಎಂದು ಆರೋಪಿಸಿದೆ. ವಿವಾದ ತೀವ್ರಗೊಂಡ ಬೆನ್ನಲ್ಲೇ ಖರ್ಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.
ಮೋದಿಯವರು ತಮ್ಮ ವಿರೋಧಿಗಳನ್ನು ಬೆದರಿಸುತ್ತಾರೆ ಎಂಬ ಅರ್ಥದಲ್ಲಿ ‘ಭಯೋತ್ಪಾದಕ’ ಎಂಬ ಪದ ಬಳಸಿದ್ದಾಗಿ ಹೇಳಿದ ಖರ್ಗೆ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗದ ಬಗ್ಗೆ ತಾವು ಹೇಳಲು ಯತ್ನಿಸಿದ್ದಾಗಿ ಸ್ಪಷ್ಟಪಡಿಸಿದ್ದಾರೆ.



