ಮಹಾರಾಷ್ಟ್ರ: ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿರುವ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಹಾಗೂ ಇತರೆ ಸದಸ್ಯರ ನಿರ್ಧಾರ ಕುರಿತು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ತೆಗೆದುಕೊಂಡಿರುವ ಈ ನಿರ್ಧಾರ ಸರಿಯಾದ ಮಾರ್ಗದ ಆಯ್ಕೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿ ಮಾತನಾಡಿದ ಹಜಾರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿಪ್ರಾಯ ಹೊಂದುವ ಹಕ್ಕಿದೆ ಎಂದು ಹೇಳಿದರು. ಛಡ್ಡಾ ಸೇರಿದಂತೆ ಇತರರು ಪಕ್ಷದ ಒಳಗೆ ಕೆಲವು ಸಂಕಷ್ಟಗಳನ್ನು ಎದುರಿಸಿದ್ದರಿಂದಲೇ ಅವರು ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿರಬಹುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಈ ಬೆಳವಣಿಗೆಗೆ ಎಎಪಿ ನಾಯಕತ್ವದ ವೈಫಲ್ಯವೂ ಕಾರಣವಾಗಿರಬಹುದು ಎಂದು ಅವರು ಟೀಕಿಸಿದರು. ಪಕ್ಷ ಸರಿಯಾದ ದಾರಿಯಲ್ಲಿ ನಡೆದಿದ್ದರೆ ಸದಸ್ಯರು ಹೊರಬರುವ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.
ಪಕ್ಷದೊಳಗಿನ ಅಸಮಾಧಾನ ಮತ್ತು ಸಮಸ್ಯೆಗಳೇ ಈ ರೀತಿಯ ನಿರ್ಧಾರಕ್ಕೆ ಕಾರಣವಾಗಿರಬಹುದು. ಎಲ್ಲವೂ ಸಮರ್ಪಕವಾಗಿದ್ದರೆ ಅವರು ಪಕ್ಷ ತೊರೆಯುವ ಅಗತ್ಯವೇ ಇರಲಿಲ್ಲ ಎಂದು ಅಣ್ಣಾ ಹಜಾರೆ ತಿಳಿಸಿದ್ದಾರೆ.



