ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ರೋಚಕ ಸೋಲು ಅನುಭವಿಸಿದೆ. ರಾಯ್ಪುರ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.
ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 167 ರನ್ಗಳ ಸವಾಲಿನ ಮೊತ್ತ ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಆರ್ಸಿಬಿ ಕೊನೆಯ ಓವರ್ನ ಅಂತಿಮ ಎಸೆತದಲ್ಲಿ ಗುರಿ ತಲುಪಿ 2 ವಿಕೆಟ್ಗಳ ರೋಚಕ ಜಯ ದಾಖಲಿಸಿತು.
ಪಂದ್ಯದ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್, ತಂಡದ ಸೋಲಿಗೆ ಬ್ಯಾಟಿಂಗ್ ವಿಭಾಗದ ಹಿನ್ನಡೆಯೇ ಪ್ರಮುಖ ಕಾರಣ ಎಂದು ಅಭಿಪ್ರಾಯಪಟ್ಟರು.
“ನಮ್ಮ ತಂಡದ ಸ್ಕೋರ್ನಲ್ಲಿ ಕನಿಷ್ಠ 10 ರಿಂದ 15 ರನ್ಗಳ ಕೊರತೆ ಇತ್ತು. ಪ್ರಮುಖ ಹಂತದಲ್ಲಿ ವಿಕೆಟ್ ಕಳೆದುಕೊಂಡದ್ದು ನಮ್ಮ ಮೇಲೆ ಒತ್ತಡ ತಂದಿತು. ಆದರೆ ನಮನ್ ಧೀರ್ ಹಾಗೂ ತಿಲಕ್ ವರ್ಮಾ ಬ್ಯಾಟಿಂಗ್ ಮಾಡಿದ ರೀತಿ ಅಸಾಧಾರಣವಾಗಿತ್ತು. ಅವರು ಈ ಪಿಚ್ನಲ್ಲಿ ಆಡಿದ ರೀತಿ ನೋಡಿದರೆ, ಬೇರೆ ಟ್ರ್ಯಾಕ್ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೋ ಅನ್ನಿಸಿತು,” ಎಂದು ಯುವ ಆಟಗಾರರನ್ನು ಶ್ಲಾಘಿಸಿದರು.
ಪಂದ್ಯದ ಕೊನೆಯ ಓವರ್ನಲ್ಲಿ 15 ರನ್ಗಳನ್ನು ಕಾಪಾಡುವ ಜವಾಬ್ದಾರಿ ಯುವ ಆಲ್ರೌಂಡರ್ ರಾಜ್ ಬಾವಾಗೆ ನೀಡಲಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಸೂರ್ಯಕುಮಾರ್, “ರಾಜ್ ಕಳೆದ ವರ್ಷದಿಂದಲೇ ಡೆತ್ ಓವರ್ಗಳಲ್ಲಿ ಸಾಕಷ್ಟು ಅಭ್ಯಾಸ ಮಾಡಿದ್ದಾರೆ. ಈ ಸೀಸನ್ನಲ್ಲಿ ಅವರು ಸಂಪೂರ್ಣ ವಿಭಿನ್ನ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಕೊನೆಯ ಓವರ್ನಲ್ಲಿ ಅವರು ನಮಗೆ ಗೆಲುವಿನ ಹತ್ತಿರ ತಂದು ನಿಲ್ಲಿಸಿದರು. ಅವರ ಶ್ರಮದ ಬಗ್ಗೆ ನಮಗೆ ಹೆಮ್ಮೆ ಇದೆ,” ಎಂದರು.
ಇದೇ ವೇಳೆ ಪಂದ್ಯದ ವೇಳೆ ತಿಲಕ್ ವರ್ಮಾ ಮತ್ತು ನಮನ್ ಧೀರ್ ನಡುವೆ ಕ್ಯಾಚ್ ಪಡೆಯುವ ಸಂದರ್ಭ ಉಂಟಾದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಇಂತಹ ಘಟನೆಗಳು ಆಟದ ಭಾಗವೇ. ಅಭ್ಯಾಸದ ವೇಳೆ ಇವುಗಳ ಬಗ್ಗೆ ನಾವು ಗಮನಹರಿಸುತ್ತೇವೆ. ಅಂತಿಮವಾಗಿ ತಿಲಕ್ ಅದ್ಭುತ ಕ್ಯಾಚ್ ಹಿಡಿದ ರೀತಿ ಅವರ ಸಾಮರ್ಥ್ಯವನ್ನು ತೋರಿಸುತ್ತದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.



