ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಒತ್ತಡ ಹೇರಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಈ ಬೆಳವಣಿಗೆ ಅಭಿಷೇಕ್ ಅವರ ವಿರುದ್ಧ ಸಂಚು ರೂಪಿಸಿರುವ ಅನುಮಾನವನ್ನು ಮತ್ತಷ್ಟು ಬಲಪಡಿಸಿದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಟಿಎಂಸಿ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ ನಡೆದಿತ್ತು.
ಹಲ್ಲೆಯ ಬಳಿಕ ಅವರ ಆರೋಗ್ಯದಲ್ಲಿ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅಭಿಷೇಕ್ ಅವರ ದೇಹದಲ್ಲಿ ರಕ್ತ ಹೆಪ್ಪುಗಟ್ಟಿರುವ ಲಕ್ಷಣಗಳು ಕಂಡುಬಂದಿದ್ದು, 3ಡಿ ಸ್ಕ್ಯಾನ್, ಅಲ್ಟ್ರಾಸೊನೋಗ್ರಫಿ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ವೈದ್ಯರು ನಿರಂತರವಾಗಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ಹೇಳಿದರು.
ಅಪೋಲೋ ಆಸ್ಪತ್ರೆಯ ವೈದ್ಯರು ಪರೀಕ್ಷೆ ನಡೆಸಿದ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದರು. ಅದರಂತೆ ಅವರನ್ನು ಮನೆಗೆ ಕರೆತರಲಾಗಿತ್ತು. ಆದರೆ ಆರೋಗ್ಯದಲ್ಲಿ ನಿರೀಕ್ಷಿತ ಸುಧಾರಣೆ ಕಾಣದ ಕಾರಣ ಬಳಿಕ ಬೆಲ್ಲವ್ಯೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಮತಾ ವಿವರಿಸಿದರು.
ಈ ವೇಳೆ ಬಿಜೆಪಿ ನಾಯಕರು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ವೈದ್ಯರಿಗೆ ಕರೆ ಮಾಡಿ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ ಅವರು, ಅಭಿಷೇಕ್ ಅವರಿಗೆ ಏನಾದರೂ ಅನಾಹುತ ಸಂಭವಿಸಿದರೆ ಅದರ ಹೊಣೆಯನ್ನು ಸಂಬಂಧಪಟ್ಟವರು ಹೊತ್ತುಕೊಳ್ಳಬೇಕು ಎಂದು ಎಚ್ಚರಿಸಿದರು.
ಅಭಿಷೇಕ್ ಬ್ಯಾನರ್ಜಿ ಅವರ ಚಿಕಿತ್ಸೆ ವೈದ್ಯರ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಮುಂದುವರಿದಿದೆ. ಮನೆಯಲ್ಲಿಯೂ ಆಮ್ಲಜನಕ ಸಿಲಿಂಡರ್ ಸೇರಿದಂತೆ ಅಗತ್ಯ ವೈದ್ಯಕೀಯ ಉಪಕರಣಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಮಮತಾ ತಿಳಿಸಿದರು.
ಹಲ್ಲೆ ನಡೆದ ಸಂದರ್ಭದಲ್ಲಿ ಅಭಿಷೇಕ್ ಹೆಲ್ಮೆಟ್ ಧರಿಸಿರದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದಿತ್ತು ಎಂದು ಹೇಳಿದ ಅವರು, ಇದು ಭದ್ರತಾ ವ್ಯವಸ್ಥೆಯ ದೊಡ್ಡ ವೈಫಲ್ಯ ಎಂದು ಕಿಡಿಕಾರಿದರು.



