ಬೆಂಗಳೂರು: ಐಪಿಎಲ್ 2026ರ ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿ ಹೊಸ ಇತಿಹಾಸ ನಿರ್ಮಿಸಿದೆ.
ಆದರೆ ಈ ಸಂಭ್ರಮದ ನಡುವೆಯೇ ಮುಂದಿನ ಐಪಿಎಲ್ ಋತುವಿನಲ್ಲಿ ತಂಡದ ತವರು ಮೈದಾನ ಯಾವುದು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.
52 ವರ್ಷಗಳ ಇತಿಹಾಸ ಹೊಂದಿರುವ ಎಂ. ಚಿನ್ನಸ್ವಾಮಿ ಕ್ರೀಡಾಂಗಣವನ್ನು ಆಧುನೀಕರಣಗೊಳಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮುಂದಾಗಿದ್ದು, ಸದ್ಯದ 35 ಸಾವಿರ ಆಸನಗಳ ಸಾಮರ್ಥ್ಯವನ್ನು 55 ಸಾವಿರಕ್ಕೆ ಹೆಚ್ಚಿಸುವ ಯೋಜನೆ ರೂಪಿಸಿದೆ. ಇದಕ್ಕಾಗಿ ಹಳೆಯ ಕ್ರೀಡಾಂಗಣವನ್ನು ಸಂಪೂರ್ಣವಾಗಿ ಪುನರ್ನಿರ್ಮಿಸುವ ಅಗತ್ಯವಿದ್ದು, ಕಾಮಗಾರಿ ಪೂರ್ಣಗೊಳ್ಳಲು ಕನಿಷ್ಠ ಎರಡು ವರ್ಷಗಳ ಕಾಲಾವಕಾಶ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ಐಪಿಎಲ್ ಋತುವಿನಲ್ಲಿ ಆರ್ಸಿಬಿ ತನ್ನ ತವರು ಪಂದ್ಯಗಳನ್ನು ಬೇರೆ ಕ್ರೀಡಾಂಗಣದಲ್ಲಿ ಆಡಬೇಕಾದ ಅನಿವಾರ್ಯತೆ ಎದುರಾಗುವ ಸಾಧ್ಯತೆ ಇದೆ. ರಾಯ್ಪುರ ಸೇರಿದಂತೆ ಕೆಲವು ನಗರಗಳ ಕ್ರೀಡಾಂಗಣಗಳನ್ನು ಪರ್ಯಾಯ ತವರು ಮೈದಾನವಾಗಿ ಪರಿಗಣಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.
ಈಗಾಗಲೇ ಈ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಕೆಲವು ಪಂದ್ಯಗಳಿಗೆ ರಾಯ್ಪುರವನ್ನು ತಾತ್ಕಾಲಿಕ ತವರು ಮೈದಾನವಾಗಿ ಬಳಸಲಾಗಿತ್ತು. ಹೀಗಾಗಿ ಮುಂದಿನ ಸೀಸನ್ನಲ್ಲೂ ರಾಯ್ಪುರವೇ ಆರ್ಸಿಬಿಯ ತಾತ್ಕಾಲಿಕ ಹೋಂ ಗ್ರೌಂಡ್ ಆಗುವ ಸಾಧ್ಯತೆಗಳಿವೆ.
ಸತತ ಎರಡು ಬಾರಿ ಐಪಿಎಲ್ ಟ್ರೋಫಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಆರ್ಸಿಬಿ, ಮುಂದಿನ ಸೀಸನ್ನಲ್ಲಿ ಹ್ಯಾಟ್ರಿಕ್ ಚಾಂಪಿಯನ್ ಪಟ್ಟದ ಕನಸಿನೊಂದಿಗೆ ಕಣಕ್ಕಿಳಿಯಲಿದ್ದು, ತವರು ಮೈದಾನದ ಬದಲಾವಣೆ ತಂಡದ ಪ್ರದರ್ಶನದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.



