ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜಕೀಯ ಭವಿಷ್ಯದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಅವರು ಬಿಜೆಪಿಗೆ ರಾಜೀನಾಮೆ ನೀಡಿ ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡಲಿದ್ದಾರೆ ಎಂಬ ಊಹಾಪೋಹಗಳು ಜೋರಾಗಿರುವ ನಡುವೆಯೇ, ಅಣ್ಣಾಮಲೈ ನೀಡಿರುವ ಪ್ರತಿಕ್ರಿಯೆ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ನವದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, “ಸ್ವಲ್ಪ ದಿನ ಕಾಯಿರಿ. ಇನ್ನೆರಡು ದಿನಗಳಲ್ಲಿ ಎಲ್ಲರೂ ಒಟ್ಟಿಗೆ ಕುಳಿತು ಮಾತನಾಡೋಣ. ಆಗ ಎಲ್ಲವೂ ಸ್ಪಷ್ಟವಾಗುತ್ತದೆ” ಎಂದು ಹೇಳುವ ಮೂಲಕ ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಯಾವುದೇ ಸ್ಪಷ್ಟನೆ ನೀಡದೇ ಸಸ್ಪೆನ್ಸ್ ಉಳಿಸಿಕೊಂಡರು.
ಅಣ್ಣಾಮಲೈ ಅವರ ದೆಹಲಿ ಪ್ರವಾಸ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಮೂಲಗಳ ಪ್ರಕಾರ, ಅವರು ಬಿಜೆಪಿ ರಾಷ್ಟ್ರೀಯ ನಾಯಕತ್ವದೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ಪಕ್ಷದಲ್ಲಿ ತಮ್ಮ ಮುಂದಿನ ಪಾತ್ರ ಹಾಗೂ ಭವಿಷ್ಯದ ಕಾರ್ಯತಂತ್ರಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ನಾಯಕರನ್ನು ಭೇಟಿಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಹೊಸ ಪಕ್ಷ ಘೋಷಣೆ ಸಾಧ್ಯತೆ?
ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಪ್ರಕಾರ, ಜೂನ್ 4ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಅಣ್ಣಾಮಲೈ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಮಧುರೈ ಹಾಗೂ ಕೊಯಮತ್ತೂರು ಸೇರಿದಂತೆ ಹಲವು ನಗರಗಳಲ್ಲಿ ಅಣ್ಣಾಮಲೈ ಅವರನ್ನು “2.0 ಅವತಾರ” ಎಂದು ಬಿಂಬಿಸುವ ಬೃಹತ್ ಪೋಸ್ಟರ್ಗಳು ಕಾಣಿಸಿಕೊಂಡಿದ್ದು, ಅಭಿಮಾನಿಗಳು ಮತ್ತು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ತ್ರಿಭಾಷಾ ನೀತಿ ವಿಚಾರವೂ ಚರ್ಚೆಗೆ ಕಾರಣ
ಮಾಜಿ ಐಪಿಎಸ್ ಅಧಿಕಾರಿ ಆಗಿರುವ ಅಣ್ಣಾಮಲೈ ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ತ್ರಿಭಾಷಾ ನೀತಿ ಕುರಿತು ಬಹಿರಂಗವಾಗಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀತಿಯನ್ನು ಮರುಪರಿಶೀಲಿಸುವಂತೆ ಅವರು ಒತ್ತಾಯಿಸಿದ್ದು, ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನ ಹೊಂದಿದ್ದಾರೆ ಎಂಬ ಊಹಾಪೋಹಗಳಿಗೆ ಇದೂ ಕಾರಣವಾಗಿತ್ತು.
ಎಐಎಡಿಎಂಕೆ ಮೈತ್ರಿ ಬಳಿಕ ನಾಯಕತ್ವ ಬದಲಾವಣೆ
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಮುಖವಾಗಿದ್ದ ಅಣ್ಣಾಮಲೈ ಅವರ ಆಕ್ರಮಣಕಾರಿ ರಾಜಕೀಯ ಶೈಲಿ ಸಾಕಷ್ಟು ಗಮನ ಸೆಳೆದಿತ್ತು. ಆದರೆ ನಂತರ ಎಐಎಡಿಎಂಕೆ ಮತ್ತೆ ಎನ್ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗುವ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಪ್ರಮುಖ ಷರತ್ತಾಗಿದ್ದ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಯಿಸಲಾಗಿತ್ತು.
ಈ ಬೆಳವಣಿಗೆಗಳ ನಡುವೆ ಅಣ್ಣಾಮಲೈ ಬಿಜೆಪಿ ತೊರೆದು ಸ್ವತಂತ್ರ ರಾಜಕೀಯ ಹಾದಿ ಹಿಡಿಯಲಿದ್ದಾರೆಯೇ ಅಥವಾ ಪಕ್ಷದ ನಾಯಕತ್ವ ಅವರನ್ನು ಮನವೊಲಿಸಿ ಬಿಜೆಪಿಯಲ್ಲೇ ಮುಂದುವರಿಸಲಿದೆಯೇ ಎಂಬ ಪ್ರಶ್ನೆಗೆ ಮುಂದಿನ ಕೆಲ ದಿನಗಳಲ್ಲಿ ಉತ್ತರ ಸಿಗುವ ಸಾಧ್ಯತೆ ಇದೆ. ತಮಿಳುನಾಡು ರಾಜಕೀಯದ ಗಮನ ಈಗ ಸಂಪೂರ್ಣವಾಗಿ ಅಣ್ಣಾಮಲೈ ಅವರ ಮುಂದಿನ ಹೆಜ್ಜೆಯತ್ತ ನೆಟ್ಟಿದೆ.



