ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಅಣ್ಣಾಮಲೈ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾಮಲೈ, “ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ. ಇಂದಿನಿಂದ ಹೊಸ ಪ್ರಯಾಣ ಶುರುವಾಗುತ್ತದೆ. ಜನರ ಆಶಯಗಳು, ಸಮಸ್ಯೆಗಳು ಮತ್ತು ನಿರೀಕ್ಷೆಗಳನ್ನು ನೇರವಾಗಿ ಪ್ರತಿನಿಧಿಸುವ ಹೊಸ ರಾಜಕೀಯ ವೇದಿಕೆಯನ್ನು ನಿರ್ಮಿಸುತ್ತೇನೆ” ಎಂದು ಘೋಷಿಸಿದರು.
ಹೊಸ ಆಂದೋಲನವು ಸಾಮಾನ್ಯ ನಾಗರಿಕರನ್ನು ನೇರವಾಗಿ ರಾಜಕೀಯ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಉದ್ದೇಶ ಹೊಂದಿದ್ದು, ಜನಕೇಂದ್ರಿತ ಪರ್ಯಾಯ ರಾಜಕೀಯ ಮಾದರಿಯನ್ನು ರೂಪಿಸುವ ಗುರಿ ಹೊಂದಿದೆ ಎಂದು ಅವರು ಸ್ಪಷ್ಟಪಡಿಸಿದರು.
2009ರಲ್ಲಿ ರಾಜಕೀಯ ಕ್ಷೇತ್ರದೊಂದಿಗೆ ತಮ್ಮ ಸಂಪರ್ಕ ಆರಂಭಿಸಿದ್ದ ಅಣ್ಣಾಮಲೈ, 2020ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಳಿಕ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಆದರೆ ಕಳೆದ ಕೆಲವು ತಿಂಗಳುಗಳಿಂದ ಪಕ್ಷದ ಹೈಕಮಾಂಡ್ನೊಂದಿಗೆ ಹಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು ಎನ್ನಲಾಗಿದೆ. ವಿಶೇಷವಾಗಿ ಎಐಎಡಿಎಂಕೆ ಜೊತೆಗಿನ ಮೈತ್ರಿ, 2026ರ ವಿಧಾನಸಭೆ ಚುನಾವಣೆಯ ತಂತ್ರಗಾರಿಕೆ ಹಾಗೂ ರಾಜ್ಯ ರಾಜಕಾರಣದಲ್ಲಿ ತಮ್ಮ ಪಾತ್ರಕ್ಕೆ ಸಂಬಂಧಿಸಿದ ಬೆಳವಣಿಗೆಗಳು ಅಣ್ಣಾಮಲೈ ಅಸಮಾಧಾನಕ್ಕೆ ಕಾರಣವಾಗಿದ್ದವು ಎಂಬ ಮಾತುಗಳು ಕೇಳಿಬಂದಿವೆ.
ರಾಜೀನಾಮೆಗೂ ಮುನ್ನ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ನಾಯಕತ್ವದೊಂದಿಗೆ ಸಮಾಲೋಚನೆ ನಡೆಸಿದ್ದರು. ಅಂತಿಮವಾಗಿ ಬಿಜೆಪಿ ತೊರೆದು ಸ್ವತಂತ್ರ ರಾಜಕೀಯ ದಾರಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ತಮಿಳುನಾಡಿನಲ್ಲಿ ಯುವಜನರಲ್ಲಿ ಅಪಾರ ಜನಪ್ರಿಯತೆ ಹೊಂದಿರುವ ಅಣ್ಣಾಮಲೈ ಅವರ ಮುಂದಿನ ರಾಜಕೀಯ ಹೆಜ್ಜೆ ಇದೀಗ ರಾಷ್ಟ್ರೀಯ ಮಟ್ಟದಲ್ಲೂ ಕುತೂಹಲಕ್ಕೆ ಕಾರಣವಾಗಿದೆ.



