ಶಿವಮೊಗ್ಗ: ಬುರ್ಖಾ ಧರಿಸಿ ಮಹಿಳೆಯೊಬ್ಬಳ ಹತ್ಯೆಗೆ ಯತ್ನಿಸಿದ್ದ ಮೂವರು ಯುವಕರನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ನಗರದ ಕೆ.ಆರ್.ಪುರಂ ರಸ್ತೆಯಲ್ಲಿ ನಡೆದಿದೆ.
ದರ್ಶನ್ (18), ಮಹೇಶ್ (20) ಹಾಗೂ ಅಸ್ಲಾಂ (25) ಬಂಧಿತ ಆರೋಪಿಗಳು. ಇವರು ರೌಡಿಶೀಟರ್ ಸಾತು ಎಂಬಾತನ ಪತ್ನಿ ತಬಸುಮ್ ಬಾನು ಅವರನ್ನು ಹತ್ಯೆ ಮಾಡಲು ಮನೆಗೆ ನುಗ್ಗಿದ್ದರು ಎನ್ನಲಾಗಿದೆ.
ಮಹಿಳೆಯ ಮನೆಗೆ ನುಗ್ಗಿದ ಆರೋಪಿಗಳು ಹಲ್ಲೆಗೆ ಯತ್ನಿಸಿದ ವೇಳೆ ತಬಸುಮ್ ಬಾನು ಜೋರಾಗಿ ಕೂಗಿಕೊಂಡಿದ್ದಾರೆ. ಇದರಿಂದ ಸ್ಥಳೀಯರು ಎಚ್ಚೆತ್ತು ಆರೋಪಿಗಳನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಬಳಿಕ ಸಾರ್ವಜನಿಕರು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿ ಹಾಗೂ ರೌಡಿಶೀಟರ್ ಸಾತು ಈ ಸಂಚಿನ ಸೂತ್ರಧಾರ ಎಂಬ ಮಾಹಿತಿ ಹೊರಬಿದ್ದಿದೆ. ಜೈಲಿನಲ್ಲಿ ತನ್ನನ್ನು ಭೇಟಿ ಮಾಡಲು ಪತ್ನಿ ಬರುತ್ತಿಲ್ಲ ಎಂಬ ಅಸಮಾಧಾನದಿಂದ ಆತ ಜೈಲಿನಲ್ಲೇ ಕುಳಿತು ಪತ್ನಿ ಹತ್ಯೆಗೆ ಸುಪಾರಿ ನೀಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ಪ್ರಕರಣ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



