ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹೆಸರಿನಲ್ಲಿ ರಾಜ್ಯ ಸರ್ಕಾರ ಅವುಗಳನ್ನು ಹಂತ ಹಂತವಾಗಿ ರದ್ದುಪಡಿಸುವ ಹುನ್ನಾರ ನಡೆಸುತ್ತಿದೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಪರಿಷ್ಕರಣೆ ನಡೆಸುತ್ತಿರುವ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿಲುವಿನ ಬಗ್ಗೆ ತೀವ್ರ ಅನುಮಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಾಡುವುದಾಗಿ ಹೇಳುತ್ತಿದೆ. ಆದರೆ ಇದರ ಹಿಂದೆ ಯೋಜನೆಗಳನ್ನು ಸ್ಥಗಿತಗೊಳಿಸುವ ಅಥವಾ ರದ್ದುಪಡಿಸುವ ಉದ್ದೇಶ ಅಡಗಿದೆಯೇ ಎಂಬ ಅನುಮಾನ ಮೂಡಿದೆ ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳ ಬಗ್ಗೆ ಪ್ರಶ್ನಿಸಿದ ಶ್ರೀರಾಮುಲು, ಗ್ಯಾರಂಟಿ ಯೋಜನೆಗಳ ಕುರಿತು ಸರ್ಕಾರದ ನಿಲುವೇನು ಎಂಬುದು ಸ್ಪಷ್ಟವಾಗುತ್ತಿಲ್ಲ. ಗ್ಯಾರಂಟಿ ಯೋಜನೆಗಳಲ್ಲಿ ಮೃತರ ಹೆಸರೂ ಸೇರಿವೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಈ ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರವೇ ಲೋಪ ಎಸಗಿತ್ತೇ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದ ಯೋಜನೆಗಳ ವಿರುದ್ಧವೇ ಡಿ.ಕೆ. ಶಿವಕುಮಾರ್ ಅಸಮಾಧಾನ ಹೊಂದಿದ್ದಾರೆಯೇ ಅಥವಾ ಯೋಜನೆಗಳನ್ನು ಮುಂದುವರಿಸಲು ಬದ್ಧರಾಗಿದ್ದಾರೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಬೇಕೋ ಅಥವಾ ನಿಲ್ಲಿಸಬೇಕೋ ಎಂಬ ಗೊಂದಲದಲ್ಲೇ ಸರ್ಕಾರ ಇದೆ ಎಂದು ಕಾಣುತ್ತಿದೆ ಎಂದು ಆರೋಪಿಸಿದರು.



