ವಿಜಯಸಾಕ್ಷಿ ಸುದ್ದಿ, ಗದಗ: ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಗೋವಿಂದರಾವ್ ವರದಿಯಲ್ಲಿ ಗದಗ ಜಿಲ್ಲೆಯನ್ನು ಅತ್ಯಂತ ಹಿಂದುಳಿದ ಜಿಲ್ಲೆ ಎಂದು ಗುರುತಿಸಿರುವುದು ಜಿಲ್ಲೆಯ ಅಭಿವೃದ್ಧಿ ಸ್ಥಿತಿಗತಿಗಳನ್ನು ಬಯಲು ಮಾಡಿದ್ದು, ಇದಕ್ಕೆ ಕಾಂಗ್ರೆಸ್ ಆಡಳಿತ ಮತ್ತು ಮಾಜಿ ಸಚಿವ ಎಚ್.ಕೆ. ಪಾಟೀಲ ನೇರ ಹೊಣೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದರು.
ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರ ನಂಜುಂಡಪ್ಪ ವರದಿ ಬದಲಿಗೆ ಗೋವಿಂದರಾವ್ ವರದಿ ಆಧರಿಸಿ ಅನುದಾನ ಹಂಚಿಕೆ ಮಾಡಲು ಮುಂದಾಗಿದ್ದು, ಹೊಸ ವರದಿಯಲ್ಲಿ ಗದಗ ಜಿಲ್ಲೆ ಅಭಿವೃದ್ಧಿ ಸೂಚ್ಯಂಕದಲ್ಲಿ ಹಿನ್ನಡೆ ಕಂಡಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.
ಈ ಹಿಂದೆ ನಂಜುಂಡಪ್ಪ ವರದಿಯಲ್ಲಿ ಶಿರಹಟ್ಟಿ ಹಾಗೂ ರೋಣ ತಾಲೂಕುಗಳು ಮಾತ್ರ ಹಿಂದುಳಿದ ಪಟ್ಟಿಯಲ್ಲಿದ್ದವು. ಆದರೆ ಗೋವಿಂದರಾವ್ ವರದಿಯಲ್ಲಿ ಜಿಲ್ಲೆಯ ಎಲ್ಲಾ ಏಳು ತಾಲೂಕುಗಳು ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಸೇರಿರುವುದು ಜಿಲ್ಲೆಯ ಅಭಿವೃದ್ಧಿಯ ನೈಜ ಚಿತ್ರಣವನ್ನು ತೋರಿಸುತ್ತದೆ ಎಂದು ಅವರು ಹೇಳಿದರು.
ರೋಣ ಮತ್ತು ಮುಂಡರಗಿ ತಾಲೂಕುಗಳು ಆರೋಗ್ಯ, ಆದಾಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಹಿಂದುಳಿದಿವೆ. ನರಗುಂದ, ಲಕ್ಷ್ಮೇಶ್ವರ, ಶಿರಹಟ್ಟಿ, ಗಜೇಂದ್ರಗಡ ಹಾಗೂ ಗದಗ ತಾಲೂಕುಗಳೂ ವಿವಿಧ ಅಭಿವೃದ್ಧಿ ಮಾನದಂಡಗಳಲ್ಲಿ ಹಿನ್ನಡೆ ಕಂಡಿವೆ ಎಂದು ವರದಿ ಉಲ್ಲೇಖಿಸಿರುವುದಾಗಿ ತಿಳಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಸೂಚ್ಯಂಕ ಮತ್ತು ತಲಾ ಆದಾಯದ ಸ್ಥಿತಿಯನ್ನು ಗಮನಿಸಿದರೆ ಜನಪ್ರತಿನಿಧಿಗಳು ಹಾಗೂ ಆಡಳಿತ ವ್ಯವಸ್ಥೆಯ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತವೆ ಎಂದು ರಾಜು ಕುರುಡಗಿ ಆರೋಪಿಸಿದ್ದಾರೆ.
“ಗದಗ ಜಿಲ್ಲೆ ಕೈಗಾರಿಕೆ, ಶಿಕ್ಷಣ, ಆರೋಗ್ಯ, ಆದಾಯ ಹಾಗೂ ಸಾಮಾಜಿಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹಿಂದುಳಿದಿರುವುದು ವರದಿಯಿಂದ ಸಾಬೀತಾಗಿದೆ. ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಮೊದಲು ಈ ವರದಿಗೆ ಉತ್ತರ ನೀಡಬೇಕು.”
ತೋಟಪ್ಪ (ರಾಜು) ಕುರುಡಗಿ
ಬಿಜೆಪಿ ಜಿಲ್ಲಾಧ್ಯಕ್ಷರು



