ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ‘ದಾಸೋಹ ಪ್ರಸಾದ ವಿತರಣಾ ಕೇಂದ್ರ’ ನಿರ್ಮಾಣಕ್ಕಾಗಿ ಬೆಂಗಳೂರು ಉತ್ತರ ತಾಲೂಕಿನ ಕದರನಹಳ್ಳಿಯಲ್ಲಿ 14 ಎಕರೆ 25 ಗುಂಟೆ ಜಮೀನು ಮಂಜೂರು ಮಾಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.
ಈ ಕುರಿತು ಸಿದ್ದಗಂಗಾ ಮಠದ ಆಡಳಿತಾಧಿಕಾರಿ ಎಸ್. ವಿಶ್ವನಾಥಯ್ಯ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ಟಿ.ಎಂ. ನದಾಫ್ ಅವರಿದ್ದ ವಿಭಾಗೀಯ ಪೀಠ, ಜಮೀನು ಮಂಜೂರಾತಿಯನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.
ಜೊತೆಗೆ, ಈ ಪ್ರಕರಣದಲ್ಲಿ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ಸಹ ಹೈಕೋರ್ಟ್ ಎತ್ತಿಹಿಡಿದಿದೆ. ಮಠದ ಜನಪರ ಮತ್ತು ಧಾರ್ಮಿಕ ಸೇವಾ ಚಟುವಟಿಕೆಗಳಿಗಾಗಿ ಸರ್ಕಾರ ಜಮೀನು ಮಂಜೂರು ಮಾಡಿರುವುದನ್ನು ನ್ಯಾಯಪೀಠ ಸಮರ್ಥಿಸಿದೆ.
ವಿಚಾರಣೆ ವೇಳೆ ಪ್ರತಿವಾದಿಗಳು ಸಲ್ಲಿಸಿದ್ದ ಸಾಗುವಳಿ ಚೀಟಿ ಮತ್ತು ಇತರೆ ದಾಖಲೆಗಳ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಆಧಾರದ ಮೇಲೆ ಅವು ನಕಲಿ ದಾಖಲೆಗಳಾಗಿರುವುದು ಕಂಡುಬಂದಿದೆ ಎಂದು ಉಲ್ಲೇಖಿಸಿದೆ.
ಅಲ್ಲದೆ, ಅಮೂಲ್ಯವಾದ ಸರ್ಕಾರಿ ಆಸ್ತಿಯನ್ನು ಕಬಳಿಸುವ ಉದ್ದೇಶದಿಂದ ಕೆಲವು ವ್ಯಕ್ತಿಗಳು ತೆರೆಮರೆಯಲ್ಲಿ ಕಾರ್ಯನಿರ್ವಹಿಸಿರುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಸಂಚು ರೂಪಿಸಿರುವುದು ಸ್ಪಷ್ಟವಾಗಿದೆ ಎಂದು ಪೀಠ ಹೇಳಿದೆ.
“ವಂಚನೆಯ ಮೂಲಕ ಪಡೆಯುವ ಯಾವುದೇ ಆದೇಶ ಅಥವಾ ತೀರ್ಪು ಕಾನೂನಿನ ದೃಷ್ಟಿಯಲ್ಲಿ ಅಮಾನ್ಯವಾಗುತ್ತದೆ. ವಂಚನೆ ಮತ್ತು ನ್ಯಾಯ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ನ್ಯಾಯಾಲಯವನ್ನು ತಪ್ಪು ದಾರಿಗೆಳೆಯಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬಹುದಾಗಿತ್ತು. ಆದರೆ ಪ್ರತಿವಾದಿಗಳ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ದಂಡ ವಿಧಿಸಿಲ್ಲ” ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ
ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಅವರು ದಾಸೋಹ ಪ್ರಸಾದ ವಿತರಣಾ ಕೇಂದ್ರ ನಿರ್ಮಾಣಕ್ಕಾಗಿ ಸೂಕ್ತ ಜಮೀನು ಮಂಜೂರು ಮಾಡುವಂತೆ 2007 ಮತ್ತು 2008ರಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಪರಿಗಣಿಸಿದ್ದ ಕಂದಾಯ ಇಲಾಖೆ, 2009ರ ಮೇ ತಿಂಗಳಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ಕದರನಹಳ್ಳಿ ಗ್ರಾಮದ ಸರ್ವೇ ನಂ. 41ರಲ್ಲಿನ 14.25 ಎಕರೆ ಗೋಮಾಳ ಜಮೀನನ್ನು ಮಠಕ್ಕೆ ಮಂಜೂರು ಮಾಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ಕದರನಹಳ್ಳಿಯ ನಿವಾಸಿಗಳಾದ ಕೆ.ಎಸ್. ಮಂಜೇಶ್ ಸೇರಿದಂತೆ ಐವರು, ತಾವು ಆ ಜಮೀನಿಗೆ ಸಾಗುವಳಿ ಚೀಟಿ ಹೊಂದಿರುವುದಾಗಿ ಹೇಳಿ ತಕರಾರು ಸಲ್ಲಿಸಿದ್ದರು. ಬಳಿಕ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ ಮಠದ ಪರ ತೀರ್ಪು ನೀಡಿತ್ತು.
ಆದರೆ ಆ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರ ಪರವಾಗಿ ಏಕಸದಸ್ಯ ಪೀಠ ಆದೇಶ ನೀಡಿದ್ದು, ಅವರ ಹೆಸರನ್ನು ಕಂದಾಯ ದಾಖಲೆಗಳಲ್ಲಿ ನಮೂದಿಸಲು ತಹಶೀಲ್ದಾರ್ಗೆ ಸೂಚಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿದ್ದಗಂಗಾ ಮಠ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಇದೀಗ ವಿಭಾಗೀಯ ಪೀಠ ಅಂಗೀಕರಿಸಿ, ಮಠದ ಪರವಾಗಿ ತೀರ್ಪು ನೀಡಿದೆ.



