ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರೋಣ ಮತಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಅವರ ಪಕ್ಷನಿಷ್ಠೆ ಹಾಗೂ ಸೇವಾ ಹಿರಿತನಕ್ಕೆ ಗೌರವ ಸಲ್ಲಿಸಬೇಕು ಎಂದು ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿ.ಎಸ್. ಪಾಟೀಲ ಅವರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ನಿರಂತರವಾಗಿ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅಧಿಕಾರಕ್ಕಿಂತ ಪಕ್ಷವೇ ಮುಖ್ಯ ಎಂಬ ಸಿದ್ಧಾಂತದೊಂದಿಗೆ ರಾಜಕೀಯ ಜೀವನ ಸಾಗಿಸಿರುವ ಜಿ.ಎಸ್.ಪಿ. ಅವರು ಪಕ್ಷದ ಏಳು-ಬೀಳುಗಳಲ್ಲಿ ಸಮಾನವಾಗಿ ಭಾಗಿಯಾಗಿದ್ದು, ಪಕ್ಷದ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದು ಸ್ವಾಮೀಜಿ ಹೇಳಿದ್ದಾರೆ.
ರೋಣ ಮತಕ್ಷೇತ್ರದ ಅಭಿವೃದ್ಧಿಗೆ ಜಿ.ಎಸ್. ಪಾಟೀಲ ಅವರು ಮಹತ್ವದ ಕೊಡುಗೆ ನೀಡಿದ್ದು, ಜನರೊಂದಿಗೆ ನಿರಂತರ ಸಂಪರ್ಕ ಕಾಯ್ದುಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿದ್ದಾರೆ. ಅವರ ಅನುಭವ, ಜನಪರ ಕಾಳಜಿ ಹಾಗೂ ಪಕ್ಷದ ಮೇಲಿನ ಬದ್ಧತೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ಜಿ.ಎಸ್.ಪಿ. ಅವರ ಸೇವೆಯನ್ನು ಗುರುತಿಸಿ ಸಚಿವ ಸ್ಥಾನ ನೀಡುವ ಮೂಲಕ ಉತ್ತರ ಕರ್ನಾಟಕ ಭಾಗದ ಜನರ ನಿರೀಕ್ಷೆ ಈಡೇರಿಸಬೇಕು ಎಂದು ಅಭಿನವ ಚನ್ನಬಸವ ಸ್ವಾಮೀಜಿ ಒತ್ತಾಯಿಸಿದ್ದಾರೆ.



