ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಸರ್ಕಾರಿ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು ಕಲಬುರಗಿ ನಗರ ಸಶಸ್ತ್ರ ಮೀಸಲು ಪಡೆಯ (CAR) ಪೇದೆ ಶಿವಕುಮಾರ್ ಮಾವನೂರ್ (32) ಎಂದು ಗುರುತಿಸಲಾಗಿದೆ. ಅವರು ಮೂರು ತಿಂಗಳ ಹಿಂದೆ ಬೆಂಗಳೂರಿನಿಂದ ಕಲಬುರಗಿಗೆ ವರ್ಗಾವಣೆಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಕರ್ತವ್ಯದ ವೇಳೆ ಪೊಲೀಸ್ ವಾಹನದಲ್ಲಿದ್ದ ಶಿವಕುಮಾರ್ ಅವರು ತಮ್ಮ ಬಳಿ ಇದ್ದ ಸರ್ಕಾರಿ ರೈಫಲ್ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ಪಡೆದ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಉಪ ಪೊಲೀಸ್ ಆಯುಕ್ತ ಶಾಲೂ ಉದ್ಯೋಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಾನಸಿಕ ಒತ್ತಡ, ಕೌಟುಂಬಿಕ ಸಮಸ್ಯೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.



