HomeGadag Newsಜು. 12ರಿಂದ ಜಿಲ್ಲಾದ್ಯಂತ ಹಸಿರು ಅಭಿಯಾನ

ಜು. 12ರಿಂದ ಜಿಲ್ಲಾದ್ಯಂತ ಹಸಿರು ಅಭಿಯಾನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಂಪರೆಯನ್ನು ಉಳಿಸುವ ಉದ್ದೇಶದಿಂದ ರೋಟರಿ ಜಿಲ್ಲಾ 3170 ವತಿಯಿಂದ ಜುಲೈ 12ರಿಂದ 19ರವರೆಗೆ ಜಿಲ್ಲಾದ್ಯಂತ ಬೃಹತ್ ವೃಕ್ಷಾರೋಪಣ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಗದಗ-ಬೆಟಗೇರಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರದೀಪ ಉಗಲಾಟ ತಿಳಿಸಿದರು.

ನಗರದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ಕೇವಲ ಗಿಡ ನೆಡುವ ಕಾರ್ಯಕ್ರಮವಲ್ಲ; ಪರಿಸರ ಸಂರಕ್ಷಣೆಯನ್ನು ಜನಾಂದೋಲನವಾಗಿಸುವ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಂಪರೆಯನ್ನು ಉಳಿಸುವ ಮಹತ್ವದ ಅಭಿಯಾನವಾಗಿದೆ ಎಂದರು.

“ಒಬ್ಬ ರೋಟೇರಿಯನ್ – ಒಂದು ಮರ – ಒಂದು ಶಾಶ್ವತ ಪರಂಪರೆ” ಎಂಬ ಧ್ಯೇಯದಡಿ ಪ್ರತಿಯೊಬ್ಬ ರೋಟೇರಿಯನ್ ಕನಿಷ್ಠ ಒಂದು ಗಿಡ ನೆಟ್ಟು ಅದರ ಸಂರಕ್ಷಣೆಯ ಹೊಣೆ ಹೊರುವ ಸಂಕಲ್ಪ ಕೈಗೊಂಡಿದ್ದಾರೆ. ಸ್ಥಳೀಯ ಪರಿಸರಕ್ಕೆ ಹೊಂದುವ ದೇಶೀ ಜಾತಿಯ ಸಸಿಗಳಿಗೆ ಆದ್ಯತೆ ನೀಡಲಾಗಿದ್ದು, ಶಾಲೆಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು, ಉದ್ಯಾನವನಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವೃಕ್ಷಾರೋಪಣ ನಡೆಯಲಿದೆ ಎಂದು ಹೇಳಿದರು.

ಗಿಡ ನೆಡುವುದರ ಜೊತೆಗೆ ಅವುಗಳ ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ನಿಯಮಿತವಾಗಿ ನೀರುಣಿಸುವುದು, ಬೇಲಿ ಅಳವಡಿಸುವುದು ಹಾಗೂ ನಿರಂತರ ಮೇಲ್ವಿಚಾರಣೆ ನಡೆಸಲಾಗುವುದು. ಪರಿಸರ ಸಂರಕ್ಷಣೆಗಾಗಿ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂ ಈ ಅಭಿಯಾನದಲ್ಲಿ ಕೈಜೋಡಿಸುವಂತೆ ಅವರು ಮನವಿ ಮಾಡಿದರು.

ಅಭಿಯಾನದಲ್ಲಿ ರೋಟರಾಕ್ಟ್ ಹಾಗೂ ಇಂಟರಾಕ್ಟ್ ಸದಸ್ಯರು, ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಸರ್ಕಾರಿ ಇಲಾಖೆಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಪರಿಸರ ಪ್ರೇಮಿಗಳು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದು, ಜೀವ ವೈವಿಧ್ಯತೆ ವೃದ್ಧಿ ಮತ್ತು ಹಸಿರು ಪರಿಸರ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶೈಲೇಂದ್ರ ಬಿರಾದಾರ, ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಡಾ. ಆನಂದ ನರಸಣ್ಣವರ, ಎಸ್.ಪಿ. ಹಿರೇಮಠ, ಷಣ್ಮುಖಪ್ಪ ಕವಲೂರ ಉಪಸ್ಥಿತರಿದ್ದರು. ಸುರೇಶ ಕುಂಬಾರ ಉಪನ್ಯಾಸ ನೀಡಿದರು. ಕ್ಲಬ್ ಕಾರ್ಯದರ್ಶಿ ಅಕ್ಷಯ ಶೆಟ್ಟಿ ಸ್ವಾಗತಿಸಿ ವಂದಿಸಿದರು.

“ಗಿಡ ನೆಡುವುದಷ್ಟೇ ಸಾಲದು; ಅದನ್ನು ಮರವಾಗಿ ಬೆಳೆಸುವ ಹೊಣೆಗಾರಿಕೆಯೇ ನಿಜವಾದ ಪರಿಸರ ಸೇವೆ.”

— ಡಾ. ಪ್ರದೀಪ ಉಗಲಾಟ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img