HomeKarnataka NewsKPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು: ತನಿಖೆಗೆ ರಾಜ್ಯಪಾಲರಿಂದ ಅಧಿಕೃತ ಆದೇಶ

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು: ತನಿಖೆಗೆ ರಾಜ್ಯಪಾಲರಿಂದ ಅಧಿಕೃತ ಆದೇಶ

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯಪಾಲರ ಆದೇಶದಂತೆ, ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ. ಅಲ್ಲದೆ, ಭಾರತೀಯ ಸಂವಿಧಾನದ 317(1)ನೇ ವಿಧಿಯ ಅನ್ವಯ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶ ಹೊರಬೀಳುವವರೆಗೆ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿರುವ ಆರೋಪಗಳು ಕೇಳಿಬಂದಿವೆ. ಈ ಕುರಿತು ಸಲ್ಲಿಕೆಯಾಗಿದ್ದ ದೂರುಗಳ ಆಧಾರದ ಮೇಲೆ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧವೂ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವೇಳೆ ನಕಲಿ ಆದಾಯ ಹಾಗೂ ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಮೀಸಲಾತಿಯ ಸೌಲಭ್ಯ ಪಡೆದಿರುವ ಆರೋಪ ಕೇಳಿಬಂದಿತ್ತು. ದಾಖಲೆಗಳ ಪರಿಶೀಲನೆ ವೇಳೆ ಈ ಅಕ್ರಮ ಬೆಳಕಿಗೆ ಬಂದಿರುವುದಾಗಿ ತನಿಖಾ ಮೂಲಗಳು ತಿಳಿಸಿವೆ.

ರಾಜ್ಯಪಾಲರ ಆದೇಶಕ್ಕೆ ಸಂಬಂಧಿಸಿದಂತೆ ಲೋಕಭವನ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ, ಶಿವಶಂಕರಪ್ಪ ಸಾಹುಕಾರ್ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿರುವುದರಿಂದ ಅವುಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಇದೇ ಕಾರಣಕ್ಕೆ ಸಂವಿಧಾನದ 317(1)ನೇ ವಿಧಿಯ ಅನ್ವಯ ಪ್ರಕರಣವನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸಲು ಶಿಫಾರಸು ಮಾಡಲಾಗಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img