ಬೆಳಗಾವಿ: ಉದ್ಯೋಗ ಅರಸಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಯುವಕನನ್ನು ಆತನ ರೂಮ್ಮೇಟ್ನೇ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದು, ಮೃತದೇಹವನ್ನು ಭಾರತಕ್ಕೆ ತರಲು ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೃತ ಯುವಕನನ್ನು ಖಾನಾಪುರ ಪಟ್ಟಣದ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಎಂದು ಗುರುತಿಸಲಾಗಿದೆ.
ನೇಪಾಳದ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಸಾಹಿಲ್, ತನ್ನೊಂದಿಗೆ ವಾಸವಾಗಿದ್ದ ರೂಮ್ಮೇಟ್ನಿಂದಲೇ ಕೊಲೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಮೃತದೇಹವನ್ನು ಭಾರತಕ್ಕೆ ತರುವ ಸಂಬಂಧ ಕುಟುಂಬಸ್ಥರು ಪೊಲೀಸರ ಮೂಲಕ ಅಗತ್ಯ ಪ್ರಕ್ರಿಯೆ ಆರಂಭಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರಕ್ಕೆ ಮನವಿ ಮಾಡಿದ್ದಾರೆ.
ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದ ಯುವಕನ ದುರಂತ ಸಾವಿನ ಸುದ್ದಿ ಖಾನಾಪುರದಲ್ಲಿ ಶೋಕದ ವಾತಾವರಣ ನಿರ್ಮಿಸಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.



