HomeSports News12 ವರ್ಷಗಳ ದೇಶೀಯ ಕ್ರಿಕೆಟ್ ಹೋರಾಟದ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಪಡೆದ ಆಲ್ ರೌಂಡರ್!

12 ವರ್ಷಗಳ ದೇಶೀಯ ಕ್ರಿಕೆಟ್ ಹೋರಾಟದ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಪಡೆದ ಆಲ್ ರೌಂಡರ್!

For Dai;y Updates Join Our whatsapp Group

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, 15 ಸದಸ್ಯರ ಈ ತಂಡದಲ್ಲಿ ಏಕೈಕ ಹೊಸ ಮುಖವಾಗಿ ಮಧ್ಯಪ್ರದೇಶದ ಅನುಭವಿ ಆಫ್‌ಸ್ಪಿನ್ ಆಲ್‌ರೌಂಡರ್ ಸರಂಶ್ ಜೈನ್ ಸ್ಥಾನ ಪಡೆದಿದ್ದಾರೆ.

ಗಾಯದ ಸಮಸ್ಯೆಯಿಂದ ಮೊದಲ ಟೆಸ್ಟ್‌ಗೆ ಅಲಭ್ಯರಾಗಿರುವ ವಾಷಿಂಗ್ಟನ್ ಸುಂದರ್ ಬದಲಿಗೆ ಸರಂಶ್ ಅವರಿಗೆ ಅವಕಾಶ ನೀಡಲಾಗಿದೆ. ಈ ಆಯ್ಕೆಯೊಂದಿಗೆ ‘ಯಾರು ಈ ಸರಂಶ್ ಜೈನ್?’ ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ.

33 ವರ್ಷದ ಸರಂಶ್ ಜೈನ್ 2014ರಲ್ಲಿ ಮಧ್ಯಪ್ರದೇಶ ತಂಡದ ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಸುಮಾರು 12 ವರ್ಷಗಳ ಸತತ ಪರಿಶ್ರಮ, ಸ್ಥಿರ ಪ್ರದರ್ಶನ ಮತ್ತು ದೇಶೀಯ ಕ್ರಿಕೆಟ್‌ನಲ್ಲಿನ ಯಶಸ್ಸಿನ ಫಲವಾಗಿ ಇದೀಗ ಮೊದಲ ಬಾರಿಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಇದುವರೆಗೆ ಸರಂಶ್ ಜೈನ್ 54 ಪ್ರಥಮ ದರ್ಜೆ ಪಂದ್ಯಗಳಲ್ಲಿ 2,223 ರನ್ ಗಳಿಸಿದ್ದು, 31.76 ಬ್ಯಾಟಿಂಗ್ ಸರಾಸರಿಯನ್ನು ಹೊಂದಿದ್ದಾರೆ. ಅವರ ಖಾತೆಯಲ್ಲಿ 2 ಶತಕ ಹಾಗೂ 14 ಅರ್ಧಶತಕಗಳಿವೆ. ಬೌಲಿಂಗ್‌ನಲ್ಲೂ ಅದ್ಭುತ ಪ್ರದರ್ಶನ ನೀಡಿರುವ ಅವರು 188 ವಿಕೆಟ್‌ಗಳನ್ನು ಕಬಳಿಸಿದ್ದು, 27.31ರ ಬೌಲಿಂಗ್ ಸರಾಸರಿಯನ್ನು ಹೊಂದಿದ್ದಾರೆ. ಒಂದು ಇನ್ನಿಂಗ್ಸ್‌ನಲ್ಲಿ 75 ರನ್ ನೀಡಿ 6 ವಿಕೆಟ್ ಪಡೆದಿರುವುದು ಅವರ ಅತ್ಯುತ್ತಮ ಸಾಧನೆಯಾಗಿದೆ.

ಕಳೆದ ಒಂದು ವರ್ಷದಲ್ಲಿ ದೇಶೀಯ ರೆಡ್‌ಬಾಲ್ ಕ್ರಿಕೆಟ್‌ನಲ್ಲಿ ಸರಂಶ್ ಜೈನ್ ಅಸಾಧಾರಣ ಪ್ರದರ್ಶನ ನೀಡಿದ್ದಾರೆ. ಈ ಅವಧಿಯಲ್ಲಿ 311 ರನ್ ಗಳಿಸುವುದರ ಜೊತೆಗೆ 44 ಪ್ರಥಮ ದರ್ಜೆ ವಿಕೆಟ್‌ಗಳನ್ನು ಪಡೆದು ಭಾರತದ ಅತ್ಯಂತ ಯಶಸ್ವಿ ಆಫ್‌ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ತಂಡಕ್ಕೆ ಕೊಡುಗೆ ನೀಡುವ ಸಾಮರ್ಥ್ಯವೇ ಅವರನ್ನು ಆಯ್ಕೆಗಾರರ ಗಮನ ಸೆಳೆಯುವಂತೆ ಮಾಡಿದೆ.

ದುಲೀಪ್ ಟ್ರೋಫಿಯಲ್ಲಿ ಸೆಂಟ್ರಲ್ ಝೋನ್ ತಂಡ ಚಾಂಪಿಯನ್ ಪಟ್ಟಕ್ಕೇರಲು ಸರಂಶ್ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ, ಇರಾನಿ ಟ್ರೋಫಿಯಲ್ಲಿ ರೆಸ್ಟ್ ಆಫ್ ಇಂಡಿಯಾ ಪರ ಮುಂಬೈ ವಿರುದ್ಧ 121 ರನ್ ನೀಡಿ 6 ವಿಕೆಟ್ ಪಡೆದು ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದರು.

ಇತ್ತೀಚೆಗೆ ನಡೆದ ಇಂಡಿಯಾ ‘ಎ’ ತಂಡದ ಶ್ರೀಲಂಕಾ ಪ್ರವಾಸವೂ ಅವರ ರಾಷ್ಟ್ರೀಯ ತಂಡದ ಆಯ್ಕೆಗೆ ಪ್ರಮುಖ ಕಾರಣವಾಯಿತು. ಗಾಲೆಯಲ್ಲಿ ನಡೆದ ಶ್ರೀಲಂಕಾ ‘ಎ’ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯದಲ್ಲಿ ಅಜೇಯ 70 ರನ್ ಗಳಿಸಿದ್ದ ಅವರು, ಪಂದ್ಯದಲ್ಲಿ ಒಟ್ಟು 6 ವಿಕೆಟ್ ಕಬಳಿಸಿ ಆಲ್‌ರೌಂಡ್ ಪ್ರದರ್ಶನದ ಮೂಲಕ ಮ್ಯಾಚ್ ವಿನ್ನರ್ ಆಗಿ ಮಿಂಚಿದ್ದರು. ಈ ಪ್ರದರ್ಶನವೇ ಅವರಿಗೆ ಭಾರತ ಟೆಸ್ಟ್ ತಂಡದ ಬಾಗಿಲು ತೆರೆಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು.

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅಪಾರ ಅನುಭವ ಹೊಂದಿರುವ ಸರಂಶ್ ಜೈನ್ ಅವರಿಗೆ ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸುವ ಅವಕಾಶ ದೊರೆತಿದೆ. ಶ್ರೀಲಂಕಾ ಪ್ರವಾಸದಲ್ಲಿ ದೇಶೀಯ ಕ್ರಿಕೆಟ್‌ನ ಯಶಸ್ಸನ್ನು ಮುಂದುವರಿಸಿ ಭಾರತ ತಂಡದ ಪ್ರಮುಖ ಆಲ್‌ರೌಂಡರ್ ಆಗಿ ಹೊರಹೊಮ್ಮುವ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img