ವಿಜಯಸಾಕ್ಷಿ ಸುದ್ದಿ, ಗದಗ: ದಶಕಗಳಿಂದ ನಿರೀಕ್ಷೆಯಲ್ಲಿರುವ ಗದಗ–ಹರಪನಹಳ್ಳಿ ನೂತನ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಹೂವಿನಹಡಗಲಿ ಶಾಸಕ ಕೃಷ್ಣ ನಾಯಕ ಅವರಿಗೆ ಗದಗ ಜಿಲ್ಲಾ ವಿಕಾಸ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.
ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ನೇತೃತ್ವದ ನಿಯೋಗ ಮನವಿ ಸಲ್ಲಿಸಿ, ಈ ಯೋಜನೆಯು ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದ್ದು, ರೈತರು, ವ್ಯಾಪಾರಸ್ಥರು, ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿತು.
93 ಕಿಲೋಮೀಟರ್ ಉದ್ದದ ಈ ನೂತನ ರೈಲು ಮಾರ್ಗ ಪೂರ್ಣಗೊಂಡರೆ ಗದಗ ಜಂಕ್ಷನ್ ಮೂಲಕ ವಿಜಯಪುರ ಹಾಗೂ ಮಹಾರಾಷ್ಟ್ರದೊಂದಿಗೆ ಸಂಪರ್ಕ ವಿಸ್ತರಿಸುವುದರ ಜೊತೆಗೆ, ಹೂವಿನಹಡಗಲಿ–ಹರಪನಹಳ್ಳಿ ಭಾಗಕ್ಕೆ ಬೆಂಗಳೂರು, ಮೈಸೂರು ಮತ್ತು ಚೆನ್ನೈ ಮಾರ್ಗಗಳ ಸಂಪರ್ಕವೂ ಸುಲಭವಾಗಲಿದೆ. ಹಿಂದುಳಿದ ಪ್ರದೇಶದ ಜನರಿಗೆ ಇದು ಅಭಿವೃದ್ಧಿಯ ಹೊಸ ಅಧ್ಯಾಯವಾಗಲಿದ್ದು, ಸಂಚಾರ ಮತ್ತು ವ್ಯಾಪಾರ ಚಟುವಟಿಕೆಗಳಿಗೆ ಮಹತ್ತರ ಉತ್ತೇಜನ ದೊರೆಯಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ನೀವು ಆಡಳಿತ ಪಕ್ಷದ ಶಾಸಕರಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಹಾಗೂ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ಈ ವಿಷಯವನ್ನು ತಂದು, ಕಾಮಗಾರಿ ಶೀಘ್ರ ಆರಂಭವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಈ ಯೋಜನೆಯು ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ ಅವರ ಕನಸಿನ ಯೋಜನೆಯಾಗಿದ್ದು, ಅದನ್ನು ಸಾಕಾರಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಆದ್ಯತೆ ನೀಡಬೇಕು ಎಂದು ವೇದಿಕೆ ಒತ್ತಾಯಿಸಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ವೀರಭದ್ರಪ್ಪ ಕಬ್ಬಿಣದ, ಸಿದ್ದಪ್ಪ ಜರತಕನಿ, ವೆಂಕಟೇಶ ಕಬಾಡಿ, ರಜಾಕ್ ನೂರಭಾಷಾ, ನಾಗರಾಜ ಹಂದಿಗೋಳ, ರಫೀಕ್ ಕಿತ್ತೂರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
“ಗದಗ–ಹರಪನಹಳ್ಳಿ ರೈಲು ಮಾರ್ಗ ಈ ಭಾಗದ ಅಭಿವೃದ್ಧಿಗೆ ಹೊಸ ಅಧ್ಯಾಯ ಬರೆಯಲಿದೆ. ಕಾಮಗಾರಿ ವಿಳಂಬವಾಗದಂತೆ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು.”
– ವಿಶ್ವನಾಥ ಖಾನಾಪೂರ, ಅಧ್ಯಕ್ಷರು, ಗದಗ ಜಿಲ್ಲಾ ವಿಕಾಸ ವೇದಿಕೆ



