ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ಗಂಗಿಮಡಿ ಬಡಾವಣೆಯ ಲೀಡ್ಕರ್ ಕಾಲೋನಿಯಲ್ಲಿ ನಗರಸಭೆ ನಡೆಸಿದ ಅತಿಕ್ರಮಣ ತೆರವು ಕಾರ್ಯಾಚರಣೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಗುರುವಾರ ಮುಂಜಾನೆ ಜೆಸಿಬಿಗಳ ಮೂಲಕ ಹತ್ತಕ್ಕೂ ಹೆಚ್ಚು ಮನೆಗಳ ಕಂಪೌಂಡ್ಗಳನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ನಗರಸಭೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಫಾಯಿ ಕರ್ಮಚಾರಿಗಳಿಗೆ ಸರ್ಕಾರ ನೀಡಿರುವ ಮನೆಗಳಲ್ಲಿ ಹಲವು ವರ್ಷಗಳಿಂದ ವಾಸವಿರುವ ಬಡ ಕುಟುಂಬಗಳು ತಮ್ಮ ಖರ್ಚಿನಲ್ಲಿ ಕಂಪೌಂಡ್ ನಿರ್ಮಿಸಿಕೊಂಡಿದ್ದವು. ಯಾವುದೇ ಸಾರ್ವಜನಿಕರಿಗೆ ಅಥವಾ ವಾಹನ ಸಂಚಾರಕ್ಕೆ ತೊಂದರೆಯಾಗದಿದ್ದರೂ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ನಿವಾಸಿಗಳು ಆರೋಪಿಸಿದರು.
ಅವಳಿ ನಗರದ ಪ್ರಮುಖ ರಸ್ತೆಗಳಲ್ಲಿ ಫುಟ್ಪಾತ್ ಅತಿಕ್ರಮಿಸಿ ನಿರ್ಮಿಸಿರುವ ಬೃಹತ್ ವಾಣಿಜ್ಯ ಕಟ್ಟಡಗಳ ವಿರುದ್ಧ ನಗರಸಭೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ಬಡವರ ಮನೆಗಳ ಮೇಲೆ ಮಾತ್ರ ಬುಲ್ಡೋಜರ್ ಚಲಾಯಿಸಲಾಗಿದೆ ಎಂದು ಮಹಿಳೆಯರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್ನೊಂದಿಗೆ ಆಗಮಿಸಿ ಕಂಪೌಂಡ್ ತೆರವು ಕಾರ್ಯಾಚರಣೆ ನಡೆಸಿದ ವೇಳೆ ಸ್ಥಳೀಯ ಮಹಿಳೆಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೂ ಕಾರ್ಯಾಚರಣೆ ಮುಂದುವರಿದಿದ್ದು, ಹಲವು ಮನೆಗಳ ಕಂಪೌಂಡ್ಗಳು ನೆಲಸಮಗೊಂಡವು.
ಈ ಕುರಿತು ಪ್ರತಿಕ್ರಿಯಿಸಿದ ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಕ್ಷ್ಮಣ ಜೋಗದಂಡಕರ, ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ದೂರಿನ ಹಿನ್ನೆಲೆಯಲ್ಲಿ ನಿಯಮಾನುಸಾರ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಸ್ಥಳೀಯರು, ಬಡವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳದೆ, ಅವಳಿ ನಗರದಲ್ಲಿ ಫುಟ್ಪಾತ್ ಹಾಗೂ ರಸ್ತೆ ಅತಿಕ್ರಮಿಸಿ ನಿರ್ಮಿಸಿರುವ ಪ್ರಭಾವಿಗಳ ಕಟ್ಟಡಗಳ ವಿರುದ್ಧವೂ ನಗರಸಭೆ ಇದೇ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.



