ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಾಗೂ ವಿಧಾನಸಭೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಸುತ್ತ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹಲವು ಹೈಡ್ರಾಮಾ ಬೆಳವಣಿಗೆಗಳು ನಡೆದಿವೆ.
ಸರ್ಕಾರದ ಮಟ್ಟದಲ್ಲಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಕೊನೆ ಕ್ಷಣದವರೆಗೂ ನಡೆದ ಕಸರತ್ತಿನಿಂದಾಗಿ, ಕೆಲವೇ ಗಂಟೆಗಳ ಅವಧಿಯಲ್ಲಿ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂರು ಬಾರಿ ಬದಲಾವಣೆ ನಡೆದಿದೆ ಎನ್ನಲಾಗಿದೆ.
ಬೆಳಗ್ಗೆ ಮುಖ್ಯಮಂತ್ರಿ ಅವರು ಸ್ಪೀಕರ್ ಸ್ಥಾನಕ್ಕೆ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಶಿಫಾರಸು ಪತ್ರ ಕಳುಹಿಸಿದ್ದರು ಎನ್ನಲಾಗಿದೆ. ಆದರೆ, ಕೆಲವೇ ಗಂಟೆಗಳಲ್ಲಿ ಎಐಸಿಸಿ ಕಡೆಯಿಂದ ಜಿ.ಎಸ್. ಪಾಟೀಲ್ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಶಿಫಾರಸು ಮಾಡಲಾಗಿದ್ದು, ಈ ಬೆಳವಣಿಗೆ ಅಚ್ಚರಿಗೆ ಕಾರಣವಾಗಿದೆ.
ಇದೇ ವೇಳೆ, ಸಚಿವ ಸಂಪುಟದ ಪಟ್ಟಿಯಲ್ಲೂ ಕೊನೆ ಕ್ಷಣದ ಬದಲಾವಣೆಗಳು ನಡೆದಿವೆ. ಎಐಸಿಸಿ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿಯಲ್ಲಿ ಭಟ್ಕಳ ಶಾಸಕ ಮಂಕಾಳು ವೈದ್ಯ ಅವರ ಹೆಸರು ಕಾಣಿಸಿಕೊಂಡಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಅವರ ಹೆಸರನ್ನು ಕೈಬಿಟ್ಟು, ದಾವಣಗೆರೆ ಉತ್ತರ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ.
ಮಹಿಳಾ ಕೋಟಾದಡಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು ಎನ್ನಲಾಗಿತ್ತು. ಆದರೆ ತಮ್ಮ ಆಪ್ತರಾದ ಶಿವಣ್ಣನವರ್ ಅವರಿಗೆ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದು, ಗಾಯತ್ರಿ ಶಾಂತೇಗೌಡ ಅವರು ಪ್ರಮಾಣವಚನ ಸ್ವೀಕರಿಸದಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.
ಸಚಿವ ಸಂಪುಟದ ಅಧಿಕೃತ ಪಟ್ಟಿ ಪ್ರಕಟವಾದ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಅಸಮಾಧಾನ ಹಾಗೂ ಗೊಂದಲಗಳು ಮತ್ತಷ್ಟು ಹೆಚ್ಚಾಗಿವೆ. ಸಚಿವ ಸ್ಥಾನ ಕೈತಪ್ಪಿದ ಹಲವು ಶಾಸಕರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿದೆ.



