ಬೆಂಗಳೂರು: ನಗರದ ಹೊರವಲಯದಲ್ಲಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಇಬ್ಬರು ಯುವತಿಯರ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಒಟ್ಟಿಗೆ ಬದುಕಲು ಸಾಧ್ಯವಾಗದ ನೋವಿನಿಂದ ಈ ದುರ್ಘಟನೆಯ ನಿರ್ಧಾರ ಕೈಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು 22 ವರ್ಷದ ಸಿರ್ಜನಾ ಹಾಗೂ 23 ವರ್ಷದ ರಿತಾ ಎಂದು ಗುರುತಿಸಲಾಗಿದೆ. ಘಟನೆ ಬೆಳಕಿಗೆ ಬಂದ ತಕ್ಷಣ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದು, ಕುಟುಂಬಸ್ಥರು ಮತ್ತು ಆಪ್ತರನ್ನು ವಿಚಾರಣೆ ನಡೆಸಿದ ಬಳಿಕ ಹಲವು ಮಹತ್ವದ ಮಾಹಿತಿ ಲಭ್ಯವಾಗಿದೆ.
ಪೊಲೀಸರ ಪ್ರಕಾರ, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಿ ಒಟ್ಟಿಗೆ ಬದುಕುವ ಆಸೆ ಹೊಂದಿದ್ದರು. ಆದರೆ ತಮ್ಮ ಸಂಬಂಧವನ್ನು ಕುಟುಂಬ ಹಾಗೂ ಸಮಾಜ ಒಪ್ಪಿಕೊಳ್ಳುವುದಿಲ್ಲ ಎಂಬ ಆತಂಕ ಅವರಲ್ಲಿತ್ತು. ಇದೇ ಮಾನಸಿಕ ಒತ್ತಡದಿಂದ ಇಬ್ಬರೂ ಒಟ್ಟಿಗೆ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಸಿರ್ಜನಾ ಮತ್ತು ರಿತಾ ಸಂಬಂಧಿಕರಾಗಿದ್ದು, ನೇಪಾಳದಲ್ಲಿ ಒಟ್ಟಿಗೆ ಓದಿ ಬೆಳೆದಿದ್ದರು. ಬಾಲ್ಯದಿಂದಲೇ ಆತ್ಮೀಯರಾಗಿದ್ದ ಅವರು, ಸದಾ ಒಟ್ಟಿಗೇ ಇರುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಈ ಕಾರಣದಿಂದ ಊರಿನಲ್ಲಿ ಮಾತುಕತೆಗಳು ಆರಂಭವಾಗಿದ್ದ ಹಿನ್ನೆಲೆಯಲ್ಲಿ ಸಂಬಂಧಿಕರು ಅವರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದರು.
ಬೆಂಗಳೂರುಗೆ ಬಂದ ಬಳಿಕವೂ ಇಬ್ಬರೂ ಬೇರೆ ಬೇರೆ ಪ್ರದೇಶಗಳಲ್ಲಿ ವಾಸವಾಗಿದ್ದರೂ ವಾರದಲ್ಲಿ ಹಲವು ಬಾರಿ ಭೇಟಿಯಾಗುತ್ತಿದ್ದರು. ರಿತಾ ಫ್ರೇಜರ್ ಟೌನ್ನಲ್ಲಿ ಹಾಗೂ ಸಿರ್ಜನಾ ಜಕ್ಕೂರಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ಘಟನೆ ನಡೆದ ದಿನ ಇಬ್ಬರೂ ಸಂಬಂಧಿಕರ ಮನೆಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಕುಟುಂಬದವರ ನಡುವೆ ಮದುವೆ ವಿಚಾರ ಪ್ರಸ್ತಾಪವಾಗಿತ್ತು. ನಂತರ ‘ಸಮಾಜ ನಮ್ಮನ್ನು ಒಟ್ಟಿಗೆ ಬದುಕಲು ಬಿಡುವುದಿಲ್ಲ’ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ. ಇದೇ ಭಾವನಾತ್ಮಕ ಒತ್ತಡ ಆತ್ಮಹತ್ಯೆಯ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪೊಲೀಸರು ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.



