ಗದಗ: ಜಿಲ್ಲೆಯ ಬರ ಪರಿಸ್ಥಿತಿ ಕುರಿತು ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ನೀಡಿದ ಬೆಳೆ ಅಂಕಿ-ಅಂಶಗಳಲ್ಲಿನ ವ್ಯತ್ಯಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಸಭೆಯಲ್ಲಿ ಕೃಷಿ ಇಲಾಖೆಗೆ ಸೇರಿದ ಹತ್ತಿ ಬೆಳೆಯನ್ನು ತೋಟಗಾರಿಕೆ ಬೆಳೆ ವಿಭಾಗದಲ್ಲಿ ದಾಖಲಿಸಿರುವುದು, ಬೆಳೆ ವಿಮೆ ಅಂದಾಜು ಲೆಕ್ಕಾಚಾರದಲ್ಲಿ ಕಂಡುಬಂದ ಗೊಂದಲ ಸೇರಿದಂತೆ ಹಲವು ವಿಷಯಗಳನ್ನು ಸಚಿವರು ಪ್ರಶ್ನಿಸಿದರು. ಅಧಿಕಾರಿಯ ಉತ್ತರ ಸಮರ್ಪಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಸರ್ಕಾರಕ್ಕೆ ಸಲ್ಲಿಸುವ ವರದಿಗಳು ನಿಖರ ಮತ್ತು ವಾಸ್ತವಾಧಾರಿತವಾಗಿರಬೇಕು ಎಂದು ತಾಕೀತು ಮಾಡಿದರು.
ಇದೇ ವೇಳೆ, “ನೀವು ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಹುದ್ದೆಗೆ ಅನ್ಫಿಟ್” ಎಂದು ಸಚಿವರು ತರಾಟೆಗೆ ತೆಗೆದುಕೊಂಡರು. ಸಚಿವರ ಕಠಿಣ ಮಾತುಗಳಿಂದ ಭಾವುಕರಾದ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಸಭೆಯಲ್ಲೇ ಕಣ್ಣೀರು ಹಾಕಿದರು.
ಬರ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ಸಲ್ಲಿಸುವ ಅಂಕಿ-ಅಂಶಗಳಲ್ಲಿ ಯಾವುದೇ ರೀತಿಯ ತಪ್ಪು, ನಿರ್ಲಕ್ಷ್ಯ ಅಥವಾ ಗೊಂದಲ ಇರಬಾರದು. ರೈತರ ಹಿತಾಸಕ್ತಿಗೆ ಧಕ್ಕೆಯಾಗುವಂತಹ ಲೋಪಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಸಚಿವ ಬಸವರಾಜ ರಾಯರಡ್ಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.



