HomeKarnataka Newsಕಾವೇರಿ ಕಿಚ್ಚಿಗೆ ಕರ್ನಾಟಕ ಬಂದ್: ನಾಳೆ ಯಾವ ಸೇವೆ ಲಭ್ಯ? ಯಾವುದು ಸ್ಥಗಿತ? ಇಲ್ಲಿದೆ ವಿವರ

ಕಾವೇರಿ ಕಿಚ್ಚಿಗೆ ಕರ್ನಾಟಕ ಬಂದ್: ನಾಳೆ ಯಾವ ಸೇವೆ ಲಭ್ಯ? ಯಾವುದು ಸ್ಥಗಿತ? ಇಲ್ಲಿದೆ ವಿವರ

For Dai;y Updates Join Our whatsapp Group

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ.

ಆದರೆ, ಬಂದ್‌ಗೆ ಆರಂಭದಲ್ಲಿ ಬೆಂಬಲ ಘೋಷಿಸಿದ್ದ ಕೆಲವು ಸಂಘಟನೆಗಳು ಇದೀಗ ತಮ್ಮ ಬೆಂಬಲವನ್ನು ಹಿಂಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಬಂದ್‌ನ ಪರಿಣಾಮದ ಬಗ್ಗೆ ಕುತೂಹಲ ಮೂಡಿದೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಆದರೆ, ರೈತ ಸಂಘಟನೆಗಳನ್ನು ಹೊರತುಪಡಿಸಿ ಪ್ರಮುಖ ಸಂಘಟನೆಗಳಿಂದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿಲ್ಲ.

ಇತ್ತೀಚೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ಜಲಾಶಯಗಳ ಒಳಹರಿವಿನಲ್ಲೂ ಏರಿಕೆಯಾಗಿದೆ. ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಹಿತದ ಪರವಾಗಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿರುವುದು ಕೂಡ ಕೆಲವು ಸಂಘಟನೆಗಳು ಬಂದ್‌ನಿಂದ ಹಿಂದೆ ಸರಿಯಲು ಕಾರಣವಾಗಿದೆ ಎನ್ನಲಾಗಿದೆ.

ನಾಳೆ ಶಾಲಾ-ಕಾಲೇಜುಗಳು ಬಂದ್ ಆಗುತ್ತವೆಯೇ?

ಬಂದ್‌ಗೆ ಖಾಸಗಿ ಶಾಲಾ ಸಂಘಟನೆಗಳು ನೇರ ಬೆಂಬಲ ನೀಡಿಲ್ಲ. ಕ್ಯಾಮ್ಸ್ ಹಾಗೂ ರುಪ್ಸಾ ಸೇರಿದಂತೆ ಖಾಸಗಿ ಶಾಲಾ ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿವೆ. ಹೀಗಾಗಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ.

ಸಾರಿಗೆ ಸೇವೆ ಇರಲಿದೆಯೇ?

KSRTC, BMTC ಬಸ್‌ಗಳು ಎಂದಿನಂತೆ ಸಂಚರಿಸುವ ಸಾಧ್ಯತೆ ಇದೆ. ನಮ್ಮ ಮೆಟ್ರೋ, ರೈಲು ಸೇವೆಗಳು, ಆಟೋ ರಿಕ್ಷಾ ಹಾಗೂ ಕ್ಯಾಬ್ ಸೇವೆಗಳೂ ಯಥಾಸ್ಥಿತಿಯಲ್ಲಿ ಇರಲಿವೆ ಎಂದು ಸಂಘಟನೆಗಳ ನಿಲುವಿನಿಂದ ತಿಳಿದುಬಂದಿದೆ.

ಆಸ್ಪತ್ರೆ, ಮೆಡಿಕಲ್‌ ಶಾಪ್‌ಗಳು ಓಪನ್:

ಆರೋಗ್ಯ ಸೇವೆಗಳಿಗೆ ಯಾವುದೇ ವ್ಯತ್ಯಯ ಉಂಟಾಗುವ ಸಾಧ್ಯತೆ ಇಲ್ಲ. ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಮೆಡಿಕಲ್ ಶಾಪ್‌ಗಳು ಹಾಗೂ ಆಂಬ್ಯುಲೆನ್ಸ್ ಸೇವೆಗಳು ಎಂದಿನಂತೆ ಲಭ್ಯವಿರಲಿವೆ.

ಅಂಗಡಿ-ಮುಂಗಟ್ಟುಗಳು ತೆರೆಯಲಿವೆ:

ದಿನಸಿ ಅಂಗಡಿಗಳು, ಹಾಲಿನ ಮಳಿಗೆಗಳು, ತರಕಾರಿ ಮಾರುಕಟ್ಟೆಗಳು, ಬೇಕರಿಗಳು, ಜ್ಯೂಸ್ ಅಂಗಡಿಗಳು ಹಾಗೂ ಬೀದಿ ಬದಿ ವ್ಯಾಪಾರವೂ ಎಂದಿನಂತೆ ನಡೆಯುವ ನಿರೀಕ್ಷೆಯಿದೆ.

ಮಾಲ್‌ಗಳು, ಚಿತ್ರಮಂದಿರಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕೈಗಾರಿಕೆಗಳು ಹಾಗೂ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಯಲ್ಲೂ ಯಾವುದೇ ದೊಡ್ಡ ವ್ಯತ್ಯಯ ಉಂಟಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಬಂದ್‌ಗೆ ಯಾರ ಬೆಂಬಲ?

ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳ ಒಕ್ಕೂಟ, ಕನ್ನಡ ಸೇನೆ, ಕನ್ನಡ ಜಾಗೃತಿ ವೇದಿಕೆ ಸೇರಿದಂತೆ ಕೆಲವು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ರೈತ ಸಂಘಟನೆಗಳೂ ಬಂದ್‌ಗೆ ಬೆಂಬಲ ನೀಡಿವೆ.

ಇನ್ನು ಕೆಲವು ಸಂಘಟನೆಗಳು ಬಂದ್‌ಗೆ ನೈತಿಕ ಬೆಂಬಲ ಮಾತ್ರ ಘೋಷಿಸಿವೆ. ಖಾಸಗಿ ಬಸ್ ಸಂಘಟನೆಗಳು, ಕ್ಯಾಮ್ಸ್, ರುಪ್ಸಾ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಕೆಲವು ಸಂಘಟನೆಗಳು ನೈತಿಕ ಬೆಂಬಲ ನೀಡಿವೆ.

ಬಂದ್‌ಗೆ ಯಾರ ಬೆಂಬಲ ಇಲ್ಲ?

ಕರವೇಯ ಪ್ರವೀಣ್ ಶೆಟ್ಟಿ ಬಣ, ಶಿವರಾಮೇಗೌಡ ಬಣ ಹಾಗೂ ನಾರಾಯಣಗೌಡ ಬಣ ಸೇರಿದಂತೆ ಕೆಲವು ಪ್ರಮುಖ ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿಲ್ಲ. BMTC, KSRTC, ಆಟೋ ಹಾಗೂ ಕ್ಯಾಬ್ ಸಂಘಟನೆಗಳಿಂದಲೂ ಬಂದ್‌ಗೆ ಬೆಂಬಲ ವ್ಯಕ್ತವಾಗಿಲ್ಲ.

ವಾಟಾಳ್ ನಾಗರಾಜ್ ಅಸಮಾಧಾನ:

ಬಂದ್‌ಗೆ ಆರಂಭದಲ್ಲಿ ಬೆಂಬಲ ಘೋಷಿಸಿ ಕೊನೆಯ ಕ್ಷಣದಲ್ಲಿ ಹಿಂದೆ ಸರಿದ ಸಂಘಟನೆಗಳ ವಿರುದ್ಧ ವಾಟಾಳ್ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಬಂದ್‌ಗೆ ಬೆಂಬಲ ನೀಡುವುದಾಗಿ ಹೇಳಿದ್ದವರು ಕೊನೆಯ ಕ್ಷಣದಲ್ಲಿ ಹಿಂದೆ ಸರಿದಿದ್ದಾರೆ. “9 ತಿಂಗಳ ಗರ್ಭಿಣಿ ಕೊನೆಯ ಕ್ಷಣದಲ್ಲಿ ಹೆರಿಗೆ ಬೇಡ ಎನ್ನುವಂತಾಗಿದೆ” ಎಂದು ವ್ಯಂಗ್ಯವಾಡಿದರು.

ತಾನು ಈಗಾಗಲೇ 53 ಬಂದ್‌ಗಳನ್ನು ಮಾಡಿದ್ದೇನೆ ಎಂದು ಹೇಳಿದ ವಾಟಾಳ್, ಕರ್ನಾಟಕ ಬಂದ್ ಯಾರೊಬ್ಬರ ಕೈಯಲ್ಲೂ ಇಲ್ಲ. ಬಂದ್‌ಗೆ ಕೈಕೊಟ್ಟವರೊಂದಿಗೆ ಮತ್ತೆ ಸಂಬಂಧ ಬೆಳೆಸುವ ಪ್ರಶ್ನೆಯೇ ಇಲ್ಲ ಎಂದು ಕಿಡಿಕಾರಿದರು.

ಹೋಟೆಲ್ ಮಾಲೀಕರು ಆರಂಭದಲ್ಲಿ ಬಂದ್‌ಗೆ ಬೆಂಬಲ ನೀಡುವುದಾಗಿ ಹೇಳಿ ಇದೀಗ ನೈತಿಕ ಬೆಂಬಲಕ್ಕೆ ಸೀಮಿತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆ ವಿಚಾರವಾಗಿಯೂ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜನಜೀವನದ ಮೇಲೆ ಪರಿಣಾಮ ಎಷ್ಟಿರಲಿದೆ?

ಪ್ರಮುಖ ಸಾರಿಗೆ, ಶಿಕ್ಷಣ, ಆರೋಗ್ಯ ಹಾಗೂ ವಾಣಿಜ್ಯ ಸಂಘಟನೆಗಳು ಬಂದ್‌ಗೆ ಸಂಪೂರ್ಣ ಬೆಂಬಲ ನೀಡದಿರುವ ಹಿನ್ನೆಲೆಯಲ್ಲಿ ಆಗಸ್ಟ್ 13ರ ಕರ್ನಾಟಕ ಬಂದ್‌ನ ಪರಿಣಾಮ ಸೀಮಿತವಾಗಿರುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಬಹುತೇಕ ಕಡೆ ಜನಜೀವನ ಹಾಗೂ ವ್ಯಾಪಾರ-ವಹಿವಾಟುಗಳು ಎಂದಿನಂತೆ ನಡೆಯುವ ನಿರೀಕ್ಷೆಯಿದೆ.

ಆದಾಗ್ಯೂ, ಬಂದ್‌ಗೆ ಕರೆ ನೀಡಿರುವ ಸಂಘಟನೆಗಳು ಪ್ರತಿಭಟನೆ, ಮೆರವಣಿಗೆ ಅಥವಾ ರಸ್ತೆ ತಡೆ ನಡೆಸುವ ಸಾಧ್ಯತೆ ಇರುವುದರಿಂದ ಪ್ರಮುಖ ನಗರಗಳು ಹಾಗೂ ಪ್ರತಿಭಟನೆ ನಡೆಯುವ ಸ್ಥಳಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img