ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನರೇಗಲ್ಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಬಹುದಿನಗಳ ಬೇಡಿಕೆಯಾಗಿರುವ ಗದಗ–ಕೃಷ್ಣಾವರ–ವಾಡಿ ರೈಲು ಮಾರ್ಗದ ಹೋರಾಟಕ್ಕೆ ನರೇಗಲ್ಲ ನಿವೃತ್ತ ಸೈನಿಕರ ಸಂಘ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ಶಿವಪುತ್ರಪ್ಪ ಸಂಗನಾಳ ಹೇಳಿದರು.
ನರೇಗಲ್ಲ ನಿವೃತ್ತ ಸೈನಿಕರ ಸಂಘದ ಕಚೇರಿಯಲ್ಲಿ ನಡೆದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನರೇಗಲ್ಲ ಭಾಗದ ಜನರ ಬಹುದಿನಗಳ ರೈಲು ಬೇಡಿಕೆಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು. ರೈಲು ಸಂಪರ್ಕ ದೊರೆತರೆ ಈ ಭಾಗದ ಜನರಿಗೆ ಸಂಚಾರ, ವ್ಯಾಪಾರ ಹಾಗೂ ಉದ್ಯೋಗ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಮಕ್ಕಳಲ್ಲಿ ದೇಶಾಭಿಮಾನ ಬೆಳೆಸಿ
ನಿವೃತ್ತ ಸೈನಿಕ ಎಂ.ಎಸ್. ಮಲ್ಲನಗೌಡ್ರ ಮಾತನಾಡಿ, ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ದೇಶಾಭಿಮಾನ ಬೆಳೆಸಲು ಪಾಲಕರು ಹೆಚ್ಚಿನ ಗಮನ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚು ಸಮಯ ನೀಡುತ್ತಿದ್ದು, ಪಾಲಕರು ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು ಎಂದರು.
ಉತ್ತಮ ಶಿಕ್ಷಣದ ಜತೆಗೆ ಸಾಮಾಜಿಕ ಜವಾಬ್ದಾರಿ ಹಾಗೂ ಹಿರಿಯರಿಗೆ ಗೌರವ ನೀಡುವ ಗುಣಗಳನ್ನು ಮಕ್ಕಳಲ್ಲಿ ಬೆಳೆಸಬೇಕು. ಕುಟುಂಬದ ಆಸ್ತಿಪಾಸ್ತಿಗಳ ಸುರಕ್ಷತೆಗಾಗಿ ವರ್ಷಕ್ಕೊಮ್ಮೆಯಾದರೂ ಜಮೀನಿನ ಇ-ಉತಾರ ಪಡೆದು ಪರಿಶೀಲಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಗಿಲ್ ವಿಜಯೋತ್ಸವ ಯಶಸ್ಸಿಗೆ ಅಭಿನಂದನೆ
ಜುಲೈ ೨೬ರಂದು ನಡೆದ ಕಾರ್ಗಿಲ್ ವಿಜಯೋತ್ಸವವನ್ನು ಯಶಸ್ವಿಗೊಳಿಸಿದ ಸಂಘದ ಸದಸ್ಯರನ್ನು ಶಿವಪುತ್ರಪ್ಪ ಸಂಗನಾಳ ಅಭಿನಂದಿಸಿದರು.
ಆ.೧೫ರಂದು ಸಂತೆ ಬಜಾರ್ನ ಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ನಿವೃತ್ತ ಸೈನಿಕರು, ಸಾರ್ವಜನಿಕರು, ಯುವಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಸಭೆಯಲ್ಲಿ ಗೌರವಾಧ್ಯಕ್ಷ ಶರಣಪ್ಪ ನಾಶಿಪುಡಿ, ಶಿವಪ್ಪ ಶಿವಾಪುರ, ದಾವಲಸಾಬ ಕಿಲ್ಲೇದಾರ, ಸಂಗಪ್ಪ ಕುಷ್ಟಗಿ, ರಾಮಪ್ಪ ರೋಣದ, ಕುಮಾರಸ್ವಾಮಿ ಕೋರಧಾನ್ಯಮಠ, ಪ್ರಭುದೇವ ಮುಕ್ಕನಗೌಡ್ರ, ಮಂದಾಲಪ್ಪ ಸಂಗನಾಳ, ಗುರುಶಾಂತಗೌಡ ಮಲ್ಲನಗೌಡ್ರ, ಸಿದ್ರಾಮಪ್ಪ ಕಟ್ಟಿಮನಿ, ಮಲ್ಲಪ್ಪ ಕಡೆತೋಟದ, ಉಮೇಶ ಕರಮುಡಿ, ಈರಪ್ಪ ದೊಡ್ಡಣ್ಣವರ, ಶಿವಾನಂದ ಬಂಡಿಹಾಳ, ಬಸವೇಶ್ವರ ಚಿಕ್ಕೊಪ್ಪದ, ಈಶ್ವರಚಂದ್ರ ಬಾಗಲಿ, ಬಸವರಾಜ ಯಕ್ಕುಂಡಿ, ಸುಮಿತ್ರಾ ದಳವಾಯಿ, ಬಸವರಾಜ ಕಡೆತೋಟದ, ಇಮಾಮಸಾಬ ಕೋಲಕಾರ, ಮಲ್ಲಮ್ಮ ಭೈರಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯದರ್ಶಿ ದಾದಾಸಾಬ ನದಾಫ ವಂದಿಸಿದರು.
“ರೈಲು ಹೋರಾಟ ಸಮಿತಿ ಯಾವಾಗ ಸಭೆ ಅಥವಾ ಹೋರಾಟಕ್ಕೆ ಕರೆ ನೀಡಿದರೂ ನಿವೃತ್ತ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಪೂರ್ಣ ಬೆಂಬಲ ನೀಡಬೇಕು. ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿದ ನಾವು ನಿವೃತ್ತಿಯ ನಂತರವೂ ಸಮಾಜದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ಕೈಜೋಡಿಸಬೇಕು.”
— ಶಿವಪುತ್ರಪ್ಪ ಸಂಗನಾಳ,
ಅಧ್ಯಕ್ಷ, ನಿವೃತ್ತ ಸೈನಿಕರ ಸಂಘ, ನರೇಗಲ್ಲ



