ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿಯೊಬ್ಬರು ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಮಮತಾಶ್ರೀ (26) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಮಮತಾಶ್ರೀ ಅವರು ಮೋಹನ್ ರೆಡ್ಡಿ ಅವರನ್ನು ವಿವಾಹವಾಗಿದ್ದು, ದಂಪತಿಗೆ ನಾಲ್ಕು ವರ್ಷದ ಗಂಡು ಮಗು ಇದೆ. ಅವರು ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ವಾಸವಾಗಿದ್ದರು.
ಕಳೆದ ಕೆಲವು ದಿನಗಳಿಂದ ಪತಿ-ಪತ್ನಿಯ ನಡುವೆ ವೈಮನಸ್ಸು ಹಾಗೂ ಕೌಟುಂಬಿಕ ಕಲಹ ಮುಂದುವರಿದಿದ್ದು, ಇದರಿಂದ ಮನನೊಂದ ಮಮತಾಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಡೆತ್ನೋಟ್ನಲ್ಲಿ ಏನಿದೆ?
ಮಮತಾಶ್ರೀ ಬರೆದಿದ್ದಾರೆ ಎನ್ನಲಾದ ಡೆತ್ನೋಟ್ನಲ್ಲಿ, ತಮ್ಮ ನಾಲ್ಕು ವರ್ಷದ ಮಗುವನ್ನು ತಮ್ಮ ಪೋಷಕರ ವಶಕ್ಕೆ ಒಪ್ಪಿಸಬೇಕು ಹಾಗೂ ತಮ್ಮ ಅಂತ್ಯಸಂಸ್ಕಾರದಲ್ಲಿ ಪತಿ ಭಾಗವಹಿಸಬಾರದು ಎಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ಮೃತೆಯ ತಂದೆ ನೀಡಿದ ದೂರಿನ ಮೇರೆಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವರದಕ್ಷಿಣೆ ಕಿರುಕುಳ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



