ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬಿಜೆಪಿ ತಂಡಗಳ ಬರಗಾಲ ಅಧ್ಯಯನ ಸಂಬಂಧಿತ ವರದಿಯನ್ನು ಶೀಘ್ರವೇ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬರಗಾಲದ ಅಧ್ಯಯನಕ್ಕಾಗಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು 6 ತಂಡಗಳನ್ನು ರಚಿಸಿದ್ದರು ಎಂದು ವಿವರಿಸಿದರು. ಈ ತಂಡಗಳು ಜಿಲ್ಲೆಗಳು ಮಾತ್ರವಲ್ಲದೇ ಕೆಲವು ತಾಲೂಕುಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿವೆ ಎಂದು ಹೇಳಿದರು.
ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ರಾಜ್ಯ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂಬ ವಿಚಾರವನ್ನು ಗಮನಕ್ಕೆ ತರುವ ಉದ್ದೇಶ ಈ ವರದಿಯ ಹಿಂದಿದೆ ಎಂದು ರವಿಕುಮಾರ್ ತಿಳಿಸಿದರು. ರೈತರು ಸಂಕಷ್ಟದಲ್ಲಿದ್ದು, ಈ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ನಿರ್ಧರಿಸಲಾಗಿದೆ ಎಂದರು. ಈ ಸಂಬಂಧ ವರದಿಯನ್ನು ಸಿದ್ಧಪಡಿಸಲಾಗಿದ್ದು, ಅದನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಾಗುತ್ತಿದೆ ಎಂದು ಅವರು ವಿವರಿಸಿದರು.



