ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಶ್ರಾವಣ ಮಾಸದ ಪ್ರಯುಕ್ತ ಬೆಟಗೇರಿ ವಾರ್ಡ್ ನಂ.7ರ ಹೆಳವಿ ಓಣಿಯ ಆರಾಧ್ಯ ದೈವ ಶ್ರೀ ಚಂಗಳಾದೇವಿ ಮೂರ್ತಿ ಮೆರವಣಿಗೆ ಸೋಮವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀ ಚಂಗಳಾದೇವಿ ಮೂರ್ತಿಗೆ ಬಣ್ಣ ಹಚ್ಚಿಸಿ ವಿಶೇಷ ಅಲಂಕಾರ ಮಾಡಲಾಗಿತ್ತು. ಬಳಿಕ 101 ಪೂರ್ಣಕುಂಭ ಹಾಗೂ ವಿವಿಧ ವಾದ್ಯಮೇಳಗಳೊಂದಿಗೆ ಕನ್ಯಾಳ ಅಗಸಿಯ ದೂಳಿಕಟ್ಟಿ ಶ್ರೀ ಮಾರುತಿ ದೇವಸ್ಥಾನದಿಂದ ಮಧ್ಯಾಹ್ನ 12.30ಕ್ಕೆ ಮೆರವಣಿಗೆ ಆರಂಭವಾಯಿತು.
ಮೆರವಣಿಗೆಯು ಗಾರ್ಗಿಪೇಟೆ, ಒಕ್ಕಲಗೇರಿ ಓಣಿ, ಕುರಹಟ್ಟಿ ಪೇಟೆ, ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ, ಶ್ರೀ ವೀರಭದ್ರೇಶ್ವರ ದೇವಸ್ಥಾನ ಹಾಗೂ ಬೇಲೇರಿ ಓಣಿ ಮಾರ್ಗವಾಗಿ ಸಾಗಿ ಮರಳಿ ಹೆಳವಿ ಓಣಿಯ ದೈವದ ಮನೆಗೆ ತಲುಪಿ ಮುಕ್ತಾಯಗೊಂಡಿತು.
ಮೆರವಣಿಗೆಯುದ್ದಕ್ಕೂ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಓಣಿಯ ಮಹಿಳೆಯರು, ಯುವಕರು ಹಾಗೂ ಮಕ್ಕಳು ಸೇರಿದಂತೆ ನೂರಾರು ಜನರು ಸಂಭ್ರಮದಿಂದ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಅಂಗವಾಗಿ ಸಂಜೆ, ಮೆರವಣಿಗೆ ಹಾಗೂ ಧಾರ್ಮಿಕ ಕಾರ್ಯಕ್ರಮಕ್ಕೆ ತನು-ಮನ-ಧನದಿಂದ ಸಹಕಾರ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ ಹಾಗೂ ವಾರ್ಡ್ ನಂ.7ರ ನಗರಸಭಾ ಸದಸ್ಯ ರಾಘವೇಂದ್ರ ಯಳವತ್ತಿ ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು.
ಓಣಿಯ ಗುರು-ಹಿರಿಯರು, ಯುವಕರು, ಮಹಿಳೆಯರು ಹಾಗೂ ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.



