ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ 65-ಶಿರಹಟ್ಟಿ (ಪ.ಜಾ), 66-ಗದಗ, 67-ರೋಣ ಹಾಗೂ 68-ನರಗುಂದ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಕರಡು ಮತದಾರರ ಯಾದಿಯನ್ನು ಆ.24ರಂದು ಪ್ರಕಟಿಸಲಾಗಿದೆ. ಮತದಾರರು ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಸ್ಐಆರ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಆ.24ರಿಂದ ಸೆ.23ರವರೆಗೆ ಅವಕಾಶವಿದೆ. ಭಾರತದಲ್ಲಿನ ಬೇರೆ ಯಾವುದೇ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇರುವ ಹಾಗೂ ಅ.1, 2026ಕ್ಕೆ 18 ವರ್ಷ ಪೂರ್ಣಗೊಳ್ಳುವವರು ನಮೂನೆ–6ರಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. 2026ರ ಅರ್ಹತಾ ದಿನಾಂಕಗಳಾದ ಜ.1, ಏ.1 ಅಥವಾ ಜು.1ರಂದು 18 ವರ್ಷ ಪೂರ್ಣಗೊಳ್ಳುವವರೂ ಕರಡು ಮತದಾರರ ಪಟ್ಟಿ ಪ್ರಕಟಣೆಯ ದಿನದಿಂದ ನಮೂನೆ–6ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಆಯಾ ತ್ರೈಮಾಸಿಕಗಳಲ್ಲಿ ಪರಿಶೀಲಿಸಿ ನಿಯಮಾನುಸಾರ ನೋಂದಣಿ ಮಾಡಲಾಗುವುದು.
ನಮೂನೆ–6ರಲ್ಲಿ ಅರ್ಜಿ ಸಲ್ಲಿಸುವವರು ಘೋಷಣಾ ಪತ್ರ, ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಅರ್ಜಿಯಲ್ಲಿ ನಮೂದಿಸಿರುವ ವಿಳಾಸದಲ್ಲಿ ಸಾಮಾನ್ಯ ನಿವಾಸಿಯಾಗಿರುವುದಕ್ಕೆ ಸೂಕ್ತ ದಾಖಲೆ ಹಾಗೂ ವಯಸ್ಸಿನ ದಾಖಲೆಗಳನ್ನು ಸಲ್ಲಿಸಬೇಕು.
ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಮೂನೆ–7ರಲ್ಲಿ ಅರ್ಜಿ ಸಲ್ಲಿಸಬೇಕು. ನಿವಾಸ ಬದಲಾವಣೆ, ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ, ಯಾವುದೇ ತಿದ್ದುಪಡಿಯಿಲ್ಲದೆ ಬದಲಿ ಮತದಾರರ ಗುರುತಿನ ಚೀಟಿ (ಎಪಿಕ್) ಪಡೆಯುವುದು ಅಥವಾ ಅಂಗವಿಕಲ ವ್ಯಕ್ತಿ ಎಂದು ಗುರುತಿಸಲು ಮನವಿ ಸಲ್ಲಿಸುವುದಕ್ಕೆ ನಮೂನೆ–8ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹಕ್ಕು ಮತ್ತು ಆಕ್ಷೇಪಣೆಗಳನ್ನು ECINET ಮೊಬೈಲ್ ಆ್ಯಪ್, “voters.eci.gov.in” ವೆಬ್ಸೈಟ್, ಸಂಬಂಧಪಟ್ಟ ಮತಗಟ್ಟೆಯ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್ಒ), ಮತದಾರ ನೋಂದಣಾಧಿಕಾರಿ ಅಥವಾ ತಹಶೀಲ್ದಾರರ ಕಚೇರಿಯಲ್ಲಿ ಸಲ್ಲಿಸಬಹುದು. ಆ.24ರಿಂದ ಸೆ.23ರವರೆಗೆ ಸ್ವೀಕರಿಸುವ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಅ.27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
ಎಸ್ಐಆರ್ ಕುರಿತು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜಾಗೃತಿ ಪ್ರಚಾರ ಕೈಗೊಳ್ಳಲಾಗಿದೆ. ಅನಕ್ಷರಸ್ಥ ಮತದಾರರಿಗೆ ಬಿಎಲ್ಒಗಳು ಮತದಾರರ ಪಟ್ಟಿಯ ವಿವರಗಳನ್ನು ಓದಿ ತಿಳಿಸಿರುವುದಾಗಿ ಜಿಲ್ಲಾಧಿಕಾರಿ ಹೇಳಿದರು. ಜಿಲ್ಲೆಯಲ್ಲಿ 1,428 ಸೈನಿಕ ಮತದಾರರಿದ್ದಾರೆ.
ಈ ಸಂದರ್ಭದಲ್ಲಿ ವಿಧಾನಸಭಾ ಮತಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳಾದ ಗಂಗಪ್ಪ ಎಂ., ಬಸನಗೌಡ ಕೋಟೂರ, ನಂದಾ ಹಣಬರಟ್ಟಿ, ಎಸ್.ಡಿ. ಪಾಟೀಲ ಹಾಗೂ ಚುನಾವಣಾ ಶಾಖೆಯ ತಹಸೀಲ್ದಾರ್ ಸಂತೋಷ ಹಿರೇಮಠ ಉಪಸ್ಥಿತರಿದ್ದರು.
1.20 ಲಕ್ಷ ಮತದಾರರ ಹೆಸರು ಕೈಬದಲು
ಜೂ.16ರಂದು ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ನೋಂದಣಿಯಾಗಿದ್ದರು. ಎಸ್ಐಆರ್ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಬಿಎಲ್ಒಗಳು ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ಹಿಂದಿರುಗಿಸದ ಮತದಾರರ ಭೌತಿಕ ಪರಿಶೀಲನೆ ನಡೆಸಿದ್ದು, ಒಟ್ಟು 1,20,715 ಮತದಾರರನ್ನು ಎಎಸ್ಡಿಡಿಒ (ಗೈರುಹಾಜರಿ, ಸ್ಥಳಾಂತರ, ಮೃತ, ನಕಲು ಮತ್ತು ಇತರೆ) ಎಂದು ಗುರುತಿಸಲಾಗಿದೆ.
ಇವರ ಪೈಕಿ 5,192 ಮಂದಿ ಪತ್ತೆಯಾಗದ ಅಥವಾ ಗೈರುಹಾಜರಿರುವವರು, 71,280 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 30,318 ಮಂದಿ ಮೃತಪಟ್ಟವರು, 13,537 ಮಂದಿ ಈಗಾಗಲೇ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವವರು ಹಾಗೂ 388 ಮಂದಿ ಇತರೆ ವರ್ಗಕ್ಕೆ ಸೇರಿದವರಾಗಿದ್ದಾರೆ.
ಎಎಸ್ಡಿಡಿಒ ಮತದಾರರ ಪಟ್ಟಿಯು ಬಿಎಲ್ಒ ಅಥವಾ ಮತದಾರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿದ್ದು, ಮುಖ್ಯ ಚುನಾವಣಾಧಿಕಾರಿಗಳ ವೆಬ್ಸೈಟ್ನಲ್ಲಿಯೂ ಪ್ರಕಟಿಸಲಾಗಿದೆ.
ಕರಡು ಪಟ್ಟಿಯಲ್ಲಿ 7.82 ಲಕ್ಷ ಮತದಾರರು
1,20,715 ಹೆಸರುಗಳನ್ನು ಕೈಬಿಟ್ಟ ಬಳಿಕ ಕರಡು ಮತದಾರರ ಪಟ್ಟಿಯಲ್ಲಿ 3,92,460 ಪುರುಷರು, 3,89,723 ಮಹಿಳೆಯರು ಹಾಗೂ 49 ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 7,82,232 ಮತದಾರರಿದ್ದಾರೆ.
ಜಿಲ್ಲೆಯಲ್ಲಿ ಆ.24ರಂತೆ ಒಟ್ಟು 983 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜೂ.16ರಂದು 967 ಮತಗಟ್ಟೆಗಳಿದ್ದು, ಇದೀಗ 16 ಮತಗಟ್ಟೆಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗಿದೆ.
ಮತದಾರರ ಪಟ್ಟಿಯಲ್ಲಿ 20,891 ಅಸಂಗತತೆ ಅಥವಾ ಅಸಮಂಜಸತೆ (ಅನಾಮಲೀಸ್) ಪ್ರಕರಣಗಳು ಹಾಗೂ 5,084 ಮ್ಯಾಪಿಂಗ್ ಲಿಂಕ್ ಆಗದ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 25,975 ಮತದಾರರಿಗೆ ನೋಟಿಸ್ ಹಂಚಿಕೆ ಮಾಡಬೇಕಾಗಿದೆ. ಸಂಬಂಧಪಟ್ಟ ಮತದಾರರು ಸೂಕ್ತ ದಾಖಲೆಗಳನ್ನು ಬಿಎಲ್ಒಗಳಿಗೆ ಒದಗಿಸಿದ ಬಳಿಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗುವುದು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನ ಮತವೂ ಮಹತ್ವದ್ದಾಗಿದೆ. ಆದ್ದರಿಂದ ಮತದಾರರು ತಮ್ಮ ಹೆಸರು, ವಿಳಾಸ ಸೇರಿದಂತೆ ಮತದಾರರ ಪಟ್ಟಿಯಲ್ಲಿರುವ ವಿವರಗಳನ್ನು ಸ್ವತಃ ಪರಿಶೀಲಿಸಿಕೊಳ್ಳಬೇಕು. ಯಾವುದೇ ಲೋಪ ಅಥವಾ ತಪ್ಪು ಕಂಡುಬಂದಲ್ಲಿ ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಸರಿಪಡಿಸಿಕೊಳ್ಳಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.
— ಸಿ.ಎನ್.ಶ್ರೀಧರ್, ಜಿಲ್ಲಾಧಿಕಾರಿ, ಗದಗ



