ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ತುಂಗಾ ನದಿಗೆ ಎಸೆದು, ಬಳಿಕ 11 ತಿಂಗಳ ಗಂಡು ಮಗುವಿನೊಂದಿಗೆ ತಾನೂ ನದಿಗೆ ಹಾರಿದ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಸ್ಥಳೀಯ ಯುವಕರ ಸಮಯಪ್ರಜ್ಞೆ ಹಾಗೂ ಸಾಹಸದಿಂದ ಮಹಿಳೆ ಮತ್ತು 11 ತಿಂಗಳ ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ 6 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳು ನದಿ ಪಾಲಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸೂರು ಗ್ರಾಮದ ಭವಾನಿ ಎಂಬ ಮಹಿಳೆ ಈ ಕೃತ್ಯಕ್ಕೆ ಮುಂದಾದವರು ಎಂದು ಗುರುತಿಸಲಾಗಿದೆ. ಪತಿ ದುಗ್ಗಪ್ಪ ಅವರೊಂದಿಗೆ ನಡೆದ ಕೌಟುಂಬಿಕ ಗಲಾಟೆಯಿಂದ ಮನನೊಂದು ಮಕ್ಕಳೊಂದಿಗೆ ಶಿವಮೊಗ್ಗಕ್ಕೆ ಬಂದಿದ್ದರು ಎನ್ನಲಾಗಿದೆ.
ಭವಾನಿ ತನ್ನ 6 ವರ್ಷದ ಮಗಳು ಸಾನ್ವಿಕಾ ಹಾಗೂ 4 ವರ್ಷದ ಮಗಳು ತನ್ವಿಕಾಳನ್ನು ರೈಲ್ವೆ ಸೇತುವೆಯಿಂದ ತುಂಗಾ ನದಿಗೆ ಎಸೆದ ಬಳಿಕ, 11 ತಿಂಗಳ ಗಂಡು ಮಗುವಿನೊಂದಿಗೆ ತಾನೂ ನದಿಗೆ ಹಾರಿದ್ದಾರೆ ಎನ್ನಲಾಗಿದೆ.
ಘಟನೆಯನ್ನು ಗಮನಿಸಿದ ನವೀನ್, ದಾದಾಪೀರ್ ಸೇರಿದಂತೆ ಸ್ಥಳೀಯ ನಾಲ್ಕೈದು ಯುವಕರು ತಕ್ಷಣ ನದಿಗೆ ಹಾರಿ, ಭವಾನಿ ಹಾಗೂ 11 ತಿಂಗಳ ಮಗುವನ್ನು ರಕ್ಷಿಸಿದ್ದಾರೆ. ಬಳಿಕ ಇಬ್ಬರನ್ನೂ ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯು ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತ ನದಿ ಪಾಲಾಗಿರುವ ಇಬ್ಬರು ಮಕ್ಕಳಿಗಾಗಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೋಟ್ಗಳು ಮತ್ತು ತೆಪ್ಪಗಳ ಮೂಲಕ ಸುಮಾರು 15ರಿಂದ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಸಂಬಂಧಿಕರು ಹಾಗೂ ಗ್ರಾಮಸ್ಥರು ಧಾವಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭವಾನಿ ಮೌನಕ್ಕೆ ಶರಣಾಗಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆ ಯತ್ನದ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.



