ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಪ್ರಕ್ರಿಯೆಗೆ ಇನ್ನೊಂದು ತಿಂಗಳ ಗಡುವು ವಿಸ್ತರಿಸಲಾಗಿದೆ.
ಆರಂಭದಲ್ಲಿ ಆಗಸ್ಟ್ 31ರವರೆಗೆ ನಿಗದಿಪಡಿಸಿದ್ದ ಅವಧಿಯನ್ನು ಇದೀಗ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ.
ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವ ಉದ್ದೇಶದಿಂದ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಕಾರ್ಯ ಕೈಗೊಳ್ಳಲಾಗಿದೆ. ಜುಲೈ 1ರಿಂದ ಮರುಪರಿಶೀಲನೆ ಕಾರ್ಯ ಆರಂಭವಾಗಿದ್ದು, ಗಡುವು ಮುಕ್ತಾಯದ ವೇಳೆಗೆ ಸರ್ವೆ ಕಾರ್ಯ ಸಂಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ.
ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದುವರೆಗೆ ಸುಮಾರು ಶೇ.70ರಷ್ಟು ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಇನ್ನೂ ಶೇ.30ರಷ್ಟು ಪರಿಶೀಲನೆ ಬಾಕಿಯಿದೆ.
ವಿದ್ಯುತ್ ಗ್ರಾಹಕರಿಂದ ನಿರೀಕ್ಷಿತ ಮಟ್ಟದಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಸರ್ವೆ ಕಾರ್ಯ ಪೂರ್ಣಗೊಳಿಸಲು ಇಂಧನ ಇಲಾಖೆ ಇನ್ನೊಂದು ತಿಂಗಳ ಕಾಲಾವಕಾಶ ನೀಡಿದೆ.
ಹೀಗಾಗಿ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ವ್ಯಾಪ್ತಿಗೆ ಬರುವ ಫಲಾನುಭವಿಗಳು ಸೆಪ್ಟೆಂಬರ್ 30ರೊಳಗೆ ಸರ್ವೆ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡುವಂತೆ ತಿಳಿಸಲಾಗಿದೆ.



