ಮಂಡ್ಯ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ 14 ವರ್ಷದ ವೀರಮಣಿ ಎಂದು ಗುರುತಿಸಲಾಗಿದೆ. ಎಂದಿನಂತೆ ಮಧ್ಯಾಹ್ನ ಇತರ ಸಹಪಾಠಿಗಳೊಂದಿಗೆ ಶಾಲೆಯಲ್ಲಿ ಬಿಸಿಯೂಟ ಸೇವಿಸುತ್ತಿದ್ದ ವೇಳೆ ವೀರಮಣಿ ಏಕಾಏಕಿ ಮೂರ್ಛೆಹೋಗಿ ಕೆಳಗೆ ಬಿದ್ದಿದ್ದಾನೆ.
ತಕ್ಷಣ ಶಿಕ್ಷಕರು ಬಾಲಕನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಬಾಲಕನ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ವೀರಮಣಿ ಮೃತಪಟ್ಟಿದ್ದಾನೆ. ವೈದ್ಯರು ತಪಾಸಣೆ ನಡೆಸಿದ ಬಳಿಕ ಬಾಲಕ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ ಶಾಲಾ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿರುವುದು ಸೋಮನಹಳ್ಳಿ ಗ್ರಾಮದಲ್ಲಿ ಆಘಾತ ಮೂಡಿಸಿದೆ. ಬಾಲಕನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.



