ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ ೬ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ನೇಮಕಾತಿ ಪರೀಕ್ಷೆಯನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ನಗರದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷೆಯಲ್ಲಿ ನಕಲು, ನಕಲಿ ಅಭ್ಯರ್ಥಿಗಳ ಹಾಜರಾತಿ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶವಾಗದಂತೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–೨೦೨೩ರ ಕಲಂ ೧೬೩ರಡಿ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ.
ನಗರದ ಹೆಚ್.ಸಿ.ಇ.ಎಸ್. ಪದವಿಪೂರ್ವ ಕಾಲೇಜು, ಜಿಲ್ಲಾ ಕ್ರೀಡಾಂಗಣದ ಹತ್ತಿರ; ಮನೋರಮಾ ಪದವಿಪೂರ್ವ ಕಾಲೇಜು; ಕೆ.ಎಲ್.ಇ. ಸೊಸೈಟಿಯ ಜಗದ್ಗುರು ತೋಂಟದಾರ್ಯ ಪದವಿಪೂರ್ವ ಕಾಲೇಜು; ಸನ್ಮಾರ್ಗ ಪದವಿಪೂರ್ವ ಕಾಲೇಜು, ಮುಂಡರಗಿ ರಸ್ತೆ; ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು, ಮುಂಡರಗಿ ರಸ್ತೆ; ತೋಂಟದ ಸಿದ್ದೇಶ್ವರ ಪದವಿಪೂರ್ವ ಕಾಲೇಜು, ಭೂಮರಡ್ಡಿ ವೃತ್ತ; ಸರ್ಕಾರಿ ಪದವಿಪೂರ್ವ ಕಾಲೇಜು, ಮುಳಗುಂದ ರಸ್ತೆ ಹಾಗೂ ಕರ್ನಾಟಕ ಪದವಿಪೂರ್ವ ಕಾಲೇಜು, ಮಲ್ಲಸಮುದ್ರ ಅಂಜುಮನ್ ಕಾಲೇಜು ಕ್ಯಾಂಪಸ್ನಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಸೆಪ್ಟೆಂಬರ್ ೬ರಂದು ಬೆಳಿಗ್ಗೆ ೧೦.೩೦ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಅನಗತ್ಯವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು, ಬುಕ್ಸ್ಟಾಲ್ಗಳು ಹಾಗೂ ಫೋಟೋಕಾಪಿ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.
ಅಭ್ಯರ್ಥಿಗಳು ಹಾಗೂ ಅನಧಿಕೃತ ವ್ಯಕ್ತಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಸಾಧನ, ಕ್ಯಾಮೆರಾ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಡ್ರೋನ್ ಅಥವಾ ಯಾವುದೇ ವೈಮಾನಿಕ ಚಿತ್ರೀಕರಣ ಸಾಧನಗಳ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ಲೌಡ್ಸ್ಪೀಕರ್ ಬಳಕೆ, ಪ್ರತಿಭಟನೆ, ಮೆರವಣಿಗೆ, ಘೋಷಣೆ ಕೂಗುವುದು ಹಾಗೂ ಸಾರ್ವಜನಿಕ ಸಭೆ ನಡೆಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.
ಪರೀಕ್ಷೆಯ ಗೌಪ್ಯತೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಾರಿಗೊಳಿಸಿರುವ ಈ ಪ್ರತಿಬಂಧಕಾಜ್ಞೆಯು ಸೆಪ್ಟೆಂಬರ್ ೬ರಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



