ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಅಭಿವೃದ್ಧಿ ಹೊಂದಲು ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವುದು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಮಾಸಿಕ ಸಂತೆ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದು ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು.
ರೋಣ ತಾಲೂಕಿನ ಸವಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ ಆಯೋಜಿಸಿದ್ದ ‘ಮಾಸಿಕ ಸಂತೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್ಆರ್ಎಲ್ಎಂ) ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಹಾಗೂ ವಿವಿಧ ಸೌಲಭ್ಯಗಳನ್ನು ಪಡೆದಿರುವ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯಂತಹ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಮಹಿಳೆಯರು ತಯಾರಿಸುವ ಗುಣಮಟ್ಟದ ಉತ್ಪನ್ನಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಉತ್ತಮ ಮಾರುಕಟ್ಟೆ ದೊರಕಿಸುವುದು ಅಗತ್ಯವಾಗಿದೆ. ಇಂತಹ ಸಂತೆಯ ಮೂಲಕ ಉತ್ಪಾದಕರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಸಾಧ್ಯವಾಗಲಿದ್ದು, ಮಹಿಳೆಯರು ತಮ್ಮ ಉತ್ಪನ್ನಗಳನ್ನು ಮಧ್ಯವರ್ತಿಗಳ ಅವಲಂಬನೆಯಿಲ್ಲದೆ ನೇರವಾಗಿ ಮಾರಾಟ ಮಾಡಲು ಅವಕಾಶ ದೊರೆಯಲಿದೆ ಎಂದರು.
ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಸೃಷ್ಟಿಸಿ ಅವರ ಆದಾಯ ಹೆಚ್ಚಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಮಹಿಳಾ ಸ್ವಸಹಾಯ ಸಂಘಗಳ ಆರ್ಥಿಕ ಚಟುವಟಿಕೆಗಳಿಗೆ ಇಂತಹ ಕಾರ್ಯಕ್ರಮಗಳು ಮತ್ತಷ್ಟು ಉತ್ತೇಜನ ನೀಡಲಿವೆ ಎಂದು ತಿಳಿಸಿದರು.
ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ಮಾಸಿಕ ಸಂತೆಯಲ್ಲಿ ಭಾಗವಹಿಸಿ, ತಾವು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಸಾಂಪ್ರದಾಯಿಕ ಖಾದ್ಯಗಳು, ಕರಕುಶಲ ವಸ್ತುಗಳು ಸೇರಿದಂತೆ ಹಲವು ಉತ್ಪನ್ನಗಳು ಗ್ರಾಹಕರ ಗಮನ ಸೆಳೆದವು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವನಗೌಡ ಮೆಣಸಗಿ, ಒಕ್ಕೂಟದ ಪದಾಧಿಕಾರಿಗಳು, ಗ್ರಾಮದ ಗಣ್ಯರು, ತಾಲೂಕಿನ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು, ಸಂಜೀವಿನಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



