ಬೆಂಗಳೂರು: ನಿರುದ್ಯೋಗ ರಾಜ್ಯದ ಪ್ರಮುಖ ಸಮಸ್ಯೆಗಳಲ್ಲೊಂದಾಗಿದೆ. ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಉನ್ನತ ಶಿಕ್ಷಣ ಪಡೆದಿದ್ದರೂ ಸೂಕ್ತ ಉದ್ಯೋಗ ಸಿಗದೆ ಹಲವು ಯುವಕರು ಪರದಾಡುತ್ತಿದ್ದಾರೆ. ರಾಜ್ಯದ ಉದ್ಯೋಗ ವಿನಿಮಯ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿರುವ ಅಂಕಿ-ಅಂಶಗಳು ಕೂಡ ನಿರುದ್ಯೋಗದ ಪ್ರಮಾಣವನ್ನು ತೋರಿಸುತ್ತಿವೆ.
ಪ್ರಸ್ತುತ ರಾಜ್ಯದ ಉದ್ಯೋಗ ವಿನಿಮಯ ಕೇಂದ್ರಗಳಲ್ಲಿ 33,038 ಪದವೀಧರರು ಹಾಗೂ 1,579 ಸ್ನಾತಕೋತ್ತರ ಪದವೀಧರರು ಉದ್ಯೋಗಕ್ಕಾಗಿ ನೋಂದಾಯಿಸಿಕೊಂಡಿದ್ದಾರೆ. ಇದಲ್ಲದೆ ಕಡಿಮೆ ಶಿಕ್ಷಣ ಪಡೆದವರೂ ಸೂಕ್ತ ಉದ್ಯೋಗಕ್ಕಾಗಿ ಅವಕಾಶಗಳನ್ನು ಹುಡುಕುತ್ತಿದ್ದಾರೆ.
ಉದ್ಯೋಗಕ್ಕಾಗಿ ನೋಂದಾಯಿಸಿದವರ ಜಿಲ್ಲಾವಾರು ವಿವರ
- ಬಾಗಲಕೋಟೆ: 488
- ಬಳ್ಳಾರಿ: 1,937
- ಬೆಳಗಾವಿ: 846
- ಬೆಂಗಳೂರು ಗ್ರಾಮಾಂತರ ಮತ್ತು ನಗರ: 9,273
- ಬೀದರ್: 2,444
- ಚಾಮರಾಜನಗರ: 739
- ಚಿಕ್ಕಬಳ್ಳಾಪುರ: 169
- ಚಿಕ್ಕಮಗಳೂರು: 370
- ಚಿತ್ರದುರ್ಗ: 293
- ದಕ್ಷಿಣ ಕನ್ನಡ: 2,592
- ದಾವಣಗೆರೆ: 707
- ಧಾರವಾಡ: 442
- ಗದಗ: 934
- ಹಾಸನ: 454
- ಹಾವೇರಿ: 865
- ಕಲಬುರಗಿ: 1,487
- ಕೊಡಗು: 247
- ಕೋಲಾರ: 506
- ಕೊಪ್ಪಳ: 724
- ಮಂಡ್ಯ: 608
- ಮೈಸೂರು: 1,041
- ರಾಯಚೂರು: 310
- ರಾಮನಗರ: 473
- ತುಮಕೂರು: 1,524
- ಉಡುಪಿ: 1,000
- ಉತ್ತರ ಕನ್ನಡ: 1,192
- ವಿಜಯಪುರ: 644
- ಯಾದಗಿರಿ: 469
ನಿರುದ್ಯೋಗ ನಿವಾರಣೆಗೆ ಸರ್ಕಾರದ ಕ್ರಮವೇನು?
ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. 2025-26ನೇ ಸಾಲಿನಲ್ಲಿ ರಾಜ್ಯದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಮೂಲಕ 583 ಮಿನಿ ಉದ್ಯೋಗ ಮೇಳಗಳು ಹಾಗೂ ನೇರ ಸಂದರ್ಶನ ಕಾರ್ಯಕ್ರಮಗಳನ್ನು ಖಾಸಗಿ ವಲಯದ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳಗಳು ಮತ್ತು ನೇರ ಸಂದರ್ಶನಗಳ ಮೂಲಕ 10,616 ಅಭ್ಯರ್ಥಿಗಳಿಗೆ ಉದ್ಯೋಗದ ಆಹ್ವಾನ ನೀಡಲಾಗಿದೆ. ಇನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ನೇರ ನೇಮಕಾತಿಗೆ ಒಳಪಡುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯೂ ಮುಂದುವರಿದಿದೆ. ಉಳಿಕೆ ಅನುಮತಿ ಹಾಗೂ ನೇರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಹಮತಿ ಪಡೆಯಲು ಕ್ರಮವಹಿಸಲಾಗುತ್ತಿದೆ.
ಯುವನಿಧಿಯಿಂದ ಏನು ಲಾಭ?
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. 2026ರ ಆಗಸ್ಟ್ 18ರ ಅಂತ್ಯಕ್ಕೆ 4,46,779 ಪದವೀಧರ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಅವರಲ್ಲಿ ಅರ್ಹರಾದ 3,91,354 ಪದವೀಧರ ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗಿದೆ.
2026-27ನೇ ಸಾಲಿನಲ್ಲಿ ಯುವನಿಧಿ ಯೋಜನೆಗೆ ₹372.40 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಇದರ ಜತೆಗೆ ‘ಯುವನಿಧಿ ಪ್ಲಸ್’ ಉಪಕ್ರಮದಡಿ ಯುವನಿಧಿ ಯೋಜನೆಯಡಿ ಭತ್ಯೆ ಪಡೆಯುತ್ತಿರುವ ಪದವೀಧರರಿಗೆ ಉದ್ಯೋಗ ಮಾರುಕಟ್ಟೆಗೆ ಪೂರಕವಾಗುವಂತೆ ಕೌಶಲ್ಯ ಆಧಾರಿತ ತರಬೇತಿಯನ್ನು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ನೀಡಲಾಗುತ್ತಿದೆ. ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಅಗತ್ಯ ಕೌಶಲ್ಯಗಳನ್ನು ಬೆಳೆಸುವ ಮೂಲಕ ಉದ್ಯೋಗಾವಕಾಶ ಹೆಚ್ಚಿಸುವ ಉದ್ದೇಶವನ್ನು ಈ ಕ್ರಮ ಹೊಂದಿದೆ.



