ವಿಜಯಸಾಕ್ಷಿ ಸುದ್ದಿ, ಧಾರವಾಡ: ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಫ್.ಹೆಚ್. ಜಕ್ಕಪ್ಪನವರ ಹೇಳಿದರು.
ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2026 ಹಾಗೂ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಸವಣ್ಣನವರ ಅನುಭವ ಮಂಟಪದಿಂದ ಚಾಮರಾಜನಗರದವರೆಗೆ ಸುಮಾರು 31 ಜಿಲ್ಲೆಗಳನ್ನು ಹಾದುಹೋಗುವ ಬೃಹತ್ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಆಶಯಕ್ಕೆ ನಿಷ್ಠೆ ತೋರಿದ ಹೆಮ್ಮೆ ಕರ್ನಾಟಕಕ್ಕಿದೆ. ಇಂದಿನ ಯುವಜನರಲ್ಲಿ ದೇಶದ ಇತಿಹಾಸ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವುದು ಅತ್ಯಂತ ಮುಖ್ಯವಾಗಿದೆ. ಈ ಉದ್ದೇಶದಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಯುವ ಸಂಸತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಜಾತಿ, ಭೇದಭಾವಗಳನ್ನು ಮೀರಿ ನಾವೆಲ್ಲರೂ ಭಾರತೀಯರು ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಭ್ರಾತೃತ್ವ ಮತ್ತು ಸಮಾನತೆಯ ಮೌಲ್ಯಗಳು ಸಮಾಜದಲ್ಲಿ ಬೇರೂರಬೇಕು. ಯುವ ಮನಸ್ಸುಗಳಿಗೆ ಸಂವಿಧಾನಿಕ ಮೌಲ್ಯಗಳನ್ನು ಪರಿಚಯಿಸಿ ದೇಶದ ಐಕ್ಯತೆ ಕಾಪಾಡುವ ಜವಾಬ್ದಾರಿ ಹಿರಿಯರ ಮೇಲಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ, ಸಂಚಾರ ಸ್ವಾತಂತ್ರ್ಯ ಹಾಗೂ ಮತದಾನದ ಹಕ್ಕು ಸೇರಿದಂತೆ ಹಲವು ಹಕ್ಕುಗಳನ್ನು ನೀಡಿದೆ. ಸಂವಿಧಾನ ನೀಡಿರುವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ನಿಜವಾದ ಅರ್ಥವನ್ನು ಪ್ರತಿಯೊಬ್ಬ ನಾಗರಿಕರೂ ತಿಳಿದುಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಪ್ರಜಾಪ್ರಭುತ್ವ ಎಂದರೆ ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ ಇರುವ ಆಡಳಿತ. ಸಂವಿಧಾನದ ಪೀಠಿಕೆ ‘ನಾವು ಭಾರತದ ಪ್ರಜೆಗಳು’ ಎಂಬ ಸಾಲಿನಿಂದಲೇ ಆರಂಭವಾಗುತ್ತದೆ. ಇದು ದೇಶದ ಸಮಸ್ತ ಜನರ ಆಶಯವನ್ನು ಪ್ರತಿಬಿಂಬಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಕರ್ನಾಟಕ ವಿಶ್ವವಿದ್ಯಾಲಯದ ಮಾನವಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸದಾನಂದ ಸುಗಂಧಿ ಉಪನ್ಯಾಸ ನೀಡಿದರು.
ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಉಮೇಶ ಬೊಮ್ಮಕ್ಕನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನ ಮತ್ತು ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು, ಯುವಕರು ಹಾಗೂ ಅಧಿಕಾರಿಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಅನುಸರಿಸಿ ಕಾರ್ಯನಿರ್ವಹಿಸಬೇಕು.
— ಎಫ್.ಹೆಚ್. ಜಕ್ಕಪ್ಪನವರ, ವಿಧಾನ ಪರಿಷತ್ ಸದಸ್ಯರು



