ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರಭಕ್ತಿಯ ಪ್ರತೀಕವಾದ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿದು, ಗೀತೆಯ ಪೂರ್ಣರೂಪಕ್ಕೆ ಗೌರವ ನೀಡಬೇಕು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪೂರ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿ ಹಾಡುವಂತೆ ರಾಜ್ಯ ಸರ್ಕಾರ ಸೂಚಿಸಿರುವುದು ಖಂಡನೀಯ. ಇದು ವಂದೇ ಮಾತರಂ ಗೀತೆಗೆ ಮಾತ್ರವಲ್ಲದೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರಿಗೆ ಮಾಡಿರುವ ಅವಮಾನ ಎಂದು ಟೀಕಿಸಿದ್ದಾರೆ.
ವಂದೇ ಮಾತರಂ ಭಾರತದ ಸ್ವಾತಂತ್ರ್ಯ ಹೋರಾಟದ ಚೈತನ್ಯ, ತ್ಯಾಗ ಹಾಗೂ ರಾಷ್ಟ್ರಭಕ್ತಿಯ ಪ್ರತೀಕ. ಇಂತಹ ಐತಿಹಾಸಿಕ ಗೀತೆಯನ್ನು ಮೊಟಕುಗೊಳಿಸುವುದು ಅದರ ಪರಂಪರೆ ಹಾಗೂ ಇತಿಹಾಸವನ್ನು ಕುಗ್ಗಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ತುಷ್ಟೀಕರಣ ರಾಜಕಾರಣಕ್ಕಾಗಿ ವಂದೇ ಮಾತರಂ ವಿಚಾರದಲ್ಲಿ ಇಂತಹ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದ ಅವರು, ಸಂವಿಧಾನದ ಆಶಯಗಳ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಈ ವಿಚಾರದಲ್ಲಿ ದ್ವಂದ್ವ ನಿಲುವು ತಾಳುತ್ತಿರುವುದು ಖಂಡನೀಯ ಎಂದಿದ್ದಾರೆ.
ವಂದೇ ಮಾತರಂ ವಿಚಾರದಲ್ಲಿ ಸರ್ಕಾರದ ನಿರ್ಧಾರವನ್ನು ಬಿಜೆಪಿ ರಾಜ್ಯಾದ್ಯಂತ ವಿರೋಧಿಸಲಿದೆ. ಸರ್ಕಾರ ಕೂಡಲೇ ತನ್ನ ನಿಲುವು ಬದಲಿಸಿ, ವಂದೇ ಮಾತರಂನ ಪೂರ್ಣರೂಪಕ್ಕೆ ಗೌರವ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯದ ಜನರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಲಿಂಗರಾಜ ಪಾಟೀಲ ಎಚ್ಚರಿಸಿದ್ದಾರೆ.
ವಂದೇ ಮಾತರಂ ಕೇವಲ ಗೀತೆಯಲ್ಲ; ಅದು ಸ್ವಾತಂತ್ರ್ಯ ಹೋರಾಟದ ಚೈತನ್ಯ ಮತ್ತು ರಾಷ್ಟ್ರಭಕ್ತಿಯ ಪ್ರತೀಕ. ಇಂತಹ ಐತಿಹಾಸಿಕ ಗೀತೆಯನ್ನು ಮೊಟಕುಗೊಳಿಸುವ ನಿರ್ಧಾರವನ್ನು ಬಿಜೆಪಿ ಎಂದಿಗೂ ಒಪ್ಪುವುದಿಲ್ಲ.
— ಲಿಂಗರಾಜ ಪಾಟೀಲ ಮಲ್ಲಾಪೂರ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ



