HomeGadag Newsಕಾಮಗಾರಿಗಳ ಗುಣಮಟ್ಟಕ್ಕೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಎಚ್.ಕೆ. ಪಾಟೀಲ

ಕಾಮಗಾರಿಗಳ ಗುಣಮಟ್ಟಕ್ಕೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಎಚ್.ಕೆ. ಪಾಟೀಲ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ಅನುದಾನದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಎಂಜಿನಿಯರ್‌ಗಳು ಕಟ್ಟುನಿಟ್ಟಿನ ನಿಗಾವಹಿಸಬೇಕು. ಗುತ್ತಿಗೆದಾರರು ತಮಗೆ ಬೇಕಾದ ರೀತಿಯಲ್ಲಿ ಕಾಮಗಾರಿ ನಡೆಸದಂತೆ, ನಿಯಮಾನುಸಾರ ಕೆಲಸ ನಡೆಯುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ, ಶಾಸಕ ಎಚ್.ಕೆ. ಪಾಟೀಲ ಹೇಳಿದರು.

ನಗರದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ಗದಗ ಜಿಲ್ಲಾ ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್ (ರಿ.) ಸಹಯೋಗದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸರ್ ಎಂ. ವಿಶ್ವೇಶ್ವರಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಸ್ತೆ, ಸೇತುವೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸುವಾಗ ಅಗತ್ಯ ಅಳತೆ, ದಾಖಲೆ ಹಾಗೂ ತಾಂತ್ರಿಕ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇವಲ ಕಾಗದದ ಮೇಲಿನ ಪರಿಶೀಲನೆಗೆ ಸೀಮಿತವಾಗದೆ, ಸ್ಥಳದಲ್ಲೇ ಕಾಮಗಾರಿಯನ್ನು ಪರಿಶೀಲಿಸಿ ಲೋಪ ಕಂಡುಬಂದರೆ ತಕ್ಷಣ ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂದು ಎಚ್.ಕೆ. ಪಾಟೀಲ ಸೂಚಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮಾಜಿ ಸಚಿವ, ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಕಾಮಗಾರಿಗಳ ಗುಣಮಟ್ಟ ನೇರವಾಗಿ ಜನಪ್ರತಿನಿಧಿಗಳ ಮೇಲೂ ಪರಿಣಾಮ ಬೀರುತ್ತದೆ. ಉತ್ತಮ ಕಾಮಗಾರಿಗೆ ಎಲ್ಲರಿಗೂ ಶ್ರೇಯಸ್ಸು ದೊರೆಯುತ್ತದೆ, ಕಳಪೆ ಕಾಮಗಾರಿ ನಡೆದರೆ ಜನರು ಜನಪ್ರತಿನಿಧಿಗಳನ್ನೇ ಪ್ರಶ್ನಿಸುತ್ತಾರೆ. ಹೀಗಾಗಿ ಎಂಜಿನಿಯರ್‌ಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ, ಸರ್ಕಾರದ ಹಣ ಸದುಪಯೋಗವಾಗುವಂತೆ ನೋಡಿಕೊಳ್ಳಬೇಕು ಎಂದರು.

ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದೆ. ಬಿಡುಗಡೆಯಾದ ಅನುದಾನವನ್ನು ಸಕಾಲದಲ್ಲಿ ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಮುಖ್ಯ. ಕಾಮಗಾರಿ ಆರಂಭಿಸುವ ಮುನ್ನ ಸೂಕ್ತ ನಕ್ಷೆ, ಅಳತೆ, ತಾಂತ್ರಿಕ ಪರಿಶೀಲನೆ ಹಾಗೂ ಸಮರ್ಪಕ ಯೋಜನೆ ಸಿದ್ಧಪಡಿಸಬೇಕು. ಅನುದಾನ ಬಿಡುಗಡೆಯಾದ ಬಳಿಕ ಕಾಮಗಾರಿ ವಿಳಂಬವಾಗದಂತೆ ಕ್ರಮವಹಿಸಿ, ಸಾರ್ವಜನಿಕರಿಗೆ ಯೋಜನೆಗಳ ಪ್ರಯೋಜನ ಶೀಘ್ರ ದೊರೆಯುವಂತೆ ಮಾಡಬೇಕು ಎಂದು ಹೇಳಿದರು.

ಎಂಜಿನಿಯರಿಂಗ್ ಕ್ಷೇತ್ರದಲ್ಲಿ ದೇಶವು ಗಣನೀಯ ಪ್ರಗತಿ ಸಾಧಿಸಿದ್ದು, ಆಧುನಿಕ ತಂತ್ರಜ್ಞಾನದಿಂದ ಬೃಹತ್ ಸೇತುವೆಗಳು ಸೇರಿದಂತೆ ಹಲವು ನಿರ್ಮಾಣ ಕಾರ್ಯಗಳು ಸಾಧ್ಯವಾಗಿವೆ. ಇದೇ ತಂತ್ರಜ್ಞಾನವನ್ನು ಸ್ಥಳೀಯ ಅಭಿವೃದ್ಧಿ ಕಾಮಗಾರಿಗಳಲ್ಲೂ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಿ.ಸಿ. ಪಾಟೀಲ ಹೇಳಿದರು.

ಕಾರ್ಯಕ್ರಮದ ಆರಂಭದಲ್ಲಿ ಲೋಕೋಪಯೋಗಿ ಇಲಾಖೆ ಆವರಣದಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಯೂತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಮಾಲಾರ್ಪಣೆ ಮಾಡಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ ಉಪಸ್ಥಿತರಿದ್ದರು.

ಮುಖ್ಯ ಅಭಿಯಂತರ ಶಿವಾನಂದ ನಾಯಕ, ಕಾರ್ಯಪಾಲಕ ಅಭಿಯಂತರರಾದ ಉಮೇಶ ನಾಯಕ ಹಾಗೂ ಆರ್.ಬಿ. ಮರಾಠೆ, ಹಿರಿಯ ಭೂವಿಜ್ಞಾನಿ ಉಮೇಶ ಬಗರಿ, ಗದಗ ಜಿಲ್ಲಾ ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್ ಅಧ್ಯಕ್ಷ ಎಸ್.ಕೆ. ಪಾಟೀಲ ಸೇರಿದಂತೆ ಪದಾಧಿಕಾರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಹುಬಲಿ ಜೈನರ ಸ್ವಾಗತಿಸಿ ನಿರೂಪಿಸಿದರು. ಪ್ರಕಾಶ ಮುದಗಲ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇರಬಾರದು. ಸರ್ಕಾರದ ಹಣ ಜನರ ಹಣವಾಗಿದ್ದು, ಅದು ಸಮರ್ಪಕವಾಗಿ ಬಳಕೆಯಾಗುವಂತೆ ಎಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.

— ಎಚ್.ಕೆ. ಪಾಟೀಲ, ಶಾಸಕ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img