ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರಿಗೆ ಸಚಿವ ಸ್ಥಾನ ನೀಡಿರುವುದನ್ನು ಖಂಡಿಸಿರುವ ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ, “ಇದು ಸಚಿವ ಸಂಪುಟವಲ್ಲ, ಭ್ರಷ್ಟರ ಸಂಪುಟ” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಆರೋಪ ಎದುರಿಸಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಆರೋಪಿಸಿದರು.
ಭ್ರಷ್ಟಾಚಾರ, ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಆರೋಪಗಳಿರುವ ವ್ಯಕ್ತಿಗಳಿಗೆ ಸಚಿವ ಸ್ಥಾನ ನೀಡಿರುವುದು ಉತ್ತಮ ಆಡಳಿತ ಹಾಗೂ ಸಾರ್ವಜನಿಕ ಜೀವನದ ನೈತಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಟೀಕಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಸುಮಾರು ₹187 ಕೋಟಿ ಹಣ ದುರುಪಯೋಗ ಪ್ರಕರಣ ಗಂಭೀರವಾಗಿದ್ದು, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾದ ಸಾರ್ವಜನಿಕ ಹಣ ದುರ್ಬಳಕೆಯಾಗಿರುವ ಆರೋಪದ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಸಚಿವ ಸ್ಥಾನಗಳು ಯಾವುದೇ ಅನುಮಾನ ಅಥವಾ ವಿವಾದಗಳಿಗೆ ಎಡೆಮಾಡಿಕೊಡುವಂತಿರಬಾರದು. ಭ್ರಷ್ಟಾಚಾರವು ಕೇವಲ ಹಣದ ದುರುಪಯೋಗವಲ್ಲ, ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಯುವಕರು ಹಾಗೂ ಪರಿಶಿಷ್ಟ ಜಾತಿ-ಪಂಗಡದ ಜನರ ಹಕ್ಕುಗಳಿಗೆ ಆಗುವ ಅನ್ಯಾಯವಾಗಿದೆ ಎಂದು ಹೇಳಿದರು.
ಸಾರ್ವಜನಿಕರ ತೆರಿಗೆ ಹಣವನ್ನು ಶಿಕ್ಷಣ, ಆರೋಗ್ಯ, ಉದ್ಯೋಗ, ಕೌಶಲಾಭಿವೃದ್ಧಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಬಳಸಬೇಕು. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ಇಲ್ಲದಿದ್ದರೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮತ್ತು ಪ್ರತಿಭಟನೆ ನಡೆಸಲಿದೆ ಎಂದು ರಾಜು ಕುರುಡಗಿ ಎಚ್ಚರಿಕೆ ನೀಡಿದರು.



