ತುಮಕೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕರ್ತವ್ಯ ನಿರ್ವಹಣೆಗೆ ತೆರಳುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಆಡಳಿತ ವ್ಯವಸ್ಥೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಗೂಳೂರು ಹೋಬಳಿಯ ಗ್ರಾಮ ಲೆಕ್ಕಾಧಿಕಾರಿ ಭಾವನಾ (26) ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಸಿದ್ದಗಂಗಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಸ್ಐಆರ್ ಸಮೀಕ್ಷೆಗಾಗಿ ಮನೆ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಪ್ರಕರಣ ದಾಖಲಿಸಿಕೊಂಡಿರುವ ತುಮಕೂರು ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದು, ಡಿಕ್ಕಿ ಹೊಡೆದು ಪರಾರಿಯಾದ ವಾಹನದ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಘಟನೆಯ ಬೆನ್ನಲ್ಲೇ ಸಿದ್ದಗಂಗಾ ಆಸ್ಪತ್ರೆ ಬಳಿ ಜಮಾಯಿಸಿದ ಗ್ರಾಮ ಲೆಕ್ಕಾಧಿಕಾರಿಗಳು, ಎಸ್ಐಆರ್ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಮುಗಿಸುವಂತೆ ಅಧಿಕಾರಿಗಳು ನಿರಂತರ ಒತ್ತಡ ಹೇರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಎದುರೇ ಭಾವನಾ ಪೋಷಕರು ಕಿಡಿಕಾರಿದರು. “ರಾತ್ರಿ 10 ಗಂಟೆಯವರೆಗೆ ಸಭೆ, ಬೆಳಗ್ಗೆ 6 ಗಂಟೆಗೆ ಮತ್ತೆ ಕರ್ತವ್ಯ… ರ್ಯಾಂಕಿಂಗ್ ಮತ್ತು ಪ್ರೊಮೋಷನ್ಗಾಗಿ ಅಧಿಕಾರಿಗಳು ಸಿಬ್ಬಂದಿಯ ಜೀವದ ಜೊತೆ ಆಟವಾಡುತ್ತಿದ್ದಾರೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆ ಎಸ್ಐಆರ್ ಕರ್ತವ್ಯ ನಿರ್ವಹಣೆಯ ಒತ್ತಡದ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ



