ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ದೃಢ ಸಂಕಲ್ಪ ಹಾಗೂ ಪರಿಶ್ರಮವಿದ್ದರೆ ಜೀವನದಲ್ಲಿ ಯಾವುದೇ ಗುರಿಯನ್ನು ಸಾಧಿಸಲು ಸಾಧ್ಯ. ರೈತರು ಹಾಗೂ ಬಡ ಕಾರ್ಮಿಕರ ಕುಟುಂಬಗಳಿಂದ ಬಂದಿರುವ ವಿದ್ಯಾರ್ಥಿಗಳು ಪಾಲಕರ ಕಷ್ಟವನ್ನು ಅರಿತು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉನ್ನತ ಗುರಿ ಸಾಧಿಸಬೇಕು ಎಂದು ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ್ ನಾಯ್ಕ ಹೇಳಿದರು.
ಪಟ್ಟಣದ ಗಂ.ಭೀ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 2026–27ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿವಿಧ ಘಟಕಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದರೂ, ಮಕ್ಕಳ ಭವಿಷ್ಯ ಉತ್ತಮವಾಗಬೇಕು ಎಂಬ ಆಶಯದಿಂದ ಪಾಲಕರು ಕಷ್ಟಪಟ್ಟು ಶಿಕ್ಷಣ ಕೊಡಿಸುತ್ತಿದ್ದಾರೆ. ಅವರ ನಿರೀಕ್ಷೆಯನ್ನು ಹುಸಿಗೊಳಿಸದೆ ಉತ್ತಮ ಫಲಿತಾಂಶ ಪಡೆದು ಉನ್ನತ ಗುರಿ ಸಾಧಿಸಬೇಕು. ಗುರಿ ಸಾಧನೆಗೆ ದೃಢ ಸಂಕಲ್ಪವೇ ಪ್ರಮುಖ ಸಾಧನ ಎಂದು ಶಾಸಕರು ಹೇಳಿದರು.
ಅರ್ಥಶಾಸ್ತ್ರ ಉಪನ್ಯಾಸಕ ಎಂ. ಹುಲುಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳ ಪಾತ್ರ ಮಹತ್ವದ್ದಾಗಿದೆ. ಕಾಲೇಜಿನ ವಿವಿಧ ಘಟಕಗಳು ಉದ್ಘಾಟನೆಯೊಂದಿಗೆ ಮತ್ತಷ್ಟು ಚಟುವಟಿಕೆಯಿಂದ ಕಾರ್ಯನಿರ್ವಹಿಸಲಿವೆ ಎಂದರು.
ಕಳೆದ ಸಾಲಿನಲ್ಲಿ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದ್ದು, 50 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿವಿಧ ವಿಷಯಗಳಲ್ಲಿ 15 ವಿದ್ಯಾರ್ಥಿಗಳು ಶೇ.100 ಅಂಕ ಗಳಿಸಿ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ ಎಂದು ತಿಳಿಸಿದರು.
ವಿಶೇಷ ಉಪನ್ಯಾಸ ನೀಡಿದ ಎಸ್.ಯು.ಜೆ.ಎಂ. ಪದವಿಪೂರ್ವ ಕಾಲೇಜು ಹರಪನಹಳ್ಳಿಯ ನಿವೃತ್ತ ಉಪನ್ಯಾಸಕ ಎಂ.ಪಿ.ಎಂ. ದಯಾನಂದ ಸ್ವಾಮಿ, ಭಾರತ ಭವ್ಯ ಸಂಸ್ಕೃತಿಯ ನಾಡಾಗಿದ್ದು, ಗುರು ಪರಂಪರೆಗೆ ವಿಶೇಷ ಸ್ಥಾನವಿದೆ. ಅರಿವಿನೊಂದಿಗೆ ಗುರುವಿನ ಮಾರ್ಗದರ್ಶನ ಪಡೆದು ಶಿಕ್ಷಣವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
‘ಹಸಿರೇ ಉಸಿರು, ನೇಚರೇ ನಿಮ್ಮ ಟೀಚರ್’ ಎಂಬ ಸಂದೇಶ ನೀಡಿದ ಅವರು, ವಿದ್ಯಾರ್ಥಿಗಳು ಪ್ರಕೃತಿಯನ್ನು ಪ್ರೀತಿಸಿ ತಮಗೆ ನೀಡಿರುವ ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಕೆ. ದುರುಗಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಅಜೀವ ಸದಸ್ಯ ಗಂಗಾವತಿ ವಿಜೇತ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ನಾಗರಾಜ ಬ್ಯಾಟಿ, ಸದಸ್ಯರಾದ ಕನ್ನೀಹಳ್ಳಿ ಚಂದ್ರಶೇಖರ, ಬಸವರಾಜ ಬಡಿಗೇರ, ನಾಣ್ಯಪುರ ಕೃಷ್ಣಮೂರ್ತಿ, ಕೆ.ಬಿ.ಎಂ. ನಾಗಲಿಂಗಸ್ವಾಮಿ, ಬಿ.ಜಿ.ಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಗೂಳಪ್ಪ ಹುಲಿಮನಿ, ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಎಚ್.ಪಿ. ರಾಥೋಡ್, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಶಿವಕುಮಾರ್ ಎಸ್. ಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕಿ ಡಾ. ಉಮಾ ಸ್ವಾಗತಿಸಿದರು. ಕುಮಾರಿ ರಾಧಿಕಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶಿಕ್ಷಣ ಶಾಸ್ತ್ರ ಉಪನ್ಯಾಸಕಿ ವಿಜಯಲಕ್ಷ್ಮೀ ವಂದಿಸಿದರು.
“ದಾಖಲಾಗಿರುವ ಬಹುತೇಕ ವಿದ್ಯಾರ್ಥಿಗಳು ರೈತರು ಹಾಗೂ ಬಡ ಕಾರ್ಮಿಕರ ಮಕ್ಕಳಾಗಿದ್ದೀರಿ. ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಇಂತಹ ಕಷ್ಟದ ನಡುವೆಯೂ ಪಾಲಕರು ನಿಮ್ಮನ್ನು ಓದಿಸುತ್ತಿದ್ದಾರೆ. ಅವರ ಆಶಯದಂತೆ ಉತ್ತಮ ಫಲಿತಾಂಶ ಪಡೆದು ನಿಮ್ಮ ಗುರಿ ಸಾಧಿಸಬೇಕು.”
— ಕೆ. ನೇಮಿರಾಜ್ ನಾಯ್ಕ, ಶಾಸಕ



