ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ ಮಂಜುನಾಥ ಮಾಗಡಿ ಹಾಗೂ ಹೊನ್ನಪ್ಪ ವಡ್ಡರ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಿರಹಟ್ಟಿ ಮಂಡಳ ಘಟಕದಿಂದ ವಜಾಗೊಳಿಸಲಾಗಿದೆ ಎಂದು ಮಂಡಳ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಹೇಳಿಕೆ ನೀಡುವುದು, ಪಕ್ಷದ ಶಾಸಕರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುವುದು ಹಾಗೂ ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪ ಇವರ ಮೇಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ವಿರುದ್ಧವೂ ಹಗುರವಾಗಿ ಮಾತನಾಡಿ ಕ್ಷೇತ್ರದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುವುದರ ಜೊತೆಗೆ ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯ ಮೂಡಿಸಿ ಪಕ್ಷ ಸಂಘಟನೆಗೆ ಹಿನ್ನಡೆಯುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಕೆಲಸ ಮಾಡಿದ್ದು, ಬಳಿಕ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯ ಸೋಲಿನ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂಬ ಆರೋಪವೂ ಪ್ರಕಟಣೆಯಲ್ಲಿ ಮಾಡಲಾಗಿದೆ.
ಈ ಎಲ್ಲ ಬೆಳವಣಿಗೆಗಳನ್ನು ಪರಿಗಣಿಸಿ ಶಿರಹಟ್ಟಿ ಮಂಡಳ ಬಿಜೆಪಿ ಕೋರ್ ಕಮಿಟಿಯ ಎಲ್ಲ ಸದಸ್ಯರ ಒಮ್ಮತದ ನಿರ್ಧಾರದಂತೆ ಇಬ್ಬರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಸುನೀಲ ಮಹಾಂತಶೆಟ್ಟರ ತಿಳಿಸಿದ್ದಾರೆ.



