ಮೈಸೂರು: ಗಣೇಶ ಪ್ರತಿಷ್ಠಾಪನೆ ಹಾಗೂ ಮೆರವಣಿಗೆಗೆ ಸಂಬಂಧಿಸಿದಂತೆ ಟಿ. ನರಸೀಪುರದಲ್ಲಿ ರಾಜಕೀಯ ವಾಕ್ಸಮರ ಜೋರಾಗಿದೆ.
ಗಣೇಶೋತ್ಸವದ ವೇಳೆ ಇನ್ಸ್ಪೆಕ್ಟರ್ ನೀಡಿದ ಎಚ್ಚರಿಕೆಯ ಮಾತುಗಳು ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಕಾರ್ಯಕರ್ತರಿಗೆ ಧಮ್ಕಿ ಹಾಕಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಇನ್ಸ್ಪೆಕ್ಟರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಇದರ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಪ್ರತಾಪ್ ಸಿಂಹ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟಿ. ನರಸೀಪುರದಲ್ಲಿ ರಾಜಕೀಯ ವಾತಾವರಣ ಕಾವೇರಿದೆ.
ಇನ್ಸ್ಪೆಕ್ಟರ್ ಹೇಳಿಕೆ ಬಗ್ಗೆ ಎಸ್ಪಿ ಸ್ಪಷ್ಟನೆ:
ಇನ್ನು ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಕುರಿತು ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಪಷ್ಟನೆ ನೀಡಿದ್ದಾರೆ.
ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ಹೊಸ ನಿಯಮಗಳನ್ನು ಜಾರಿಗೊಳಿಸಿಲ್ಲ. ಶಾಂತಿ ಸಭೆಯಲ್ಲಿ ಇನ್ಸ್ಪೆಕ್ಟರ್ ಮಾತನಾಡಿದ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಗಣೇಶ ಮಂಡಳಿಗಳು ಹಿಂದಿನಿಂದಲೂ ಪಾಲಿಸಿಕೊಂಡು ಬಂದಿರುವ ಮಾರ್ಗಗಳು ಹಾಗೂ ನಿಯಮಗಳನ್ನೇ ಈ ಬಾರಿಯೂ ಅನುಸರಿಸಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷದ ಘಟನೆಯೊಂದನ್ನು ಉಲ್ಲೇಖಿಸಿ ಇನ್ಸ್ಪೆಕ್ಟರ್ ಎಚ್ಚರಿಕೆ ನೀಡಿದ್ದರು. ಆದರೆ ಯಾವುದೇ ರೀತಿಯ ಹೊಸ ನಿರ್ಬಂಧಗಳನ್ನು ವಿಧಿಸಿಲ್ಲ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ.
ಹೀಗಾಗಿ ಗಣೇಶೋತ್ಸವ ಮೆರವಣಿಗೆ ವಿಚಾರದಲ್ಲಿ ಟಿ. ನರಸೀಪುರದಲ್ಲಿ ಉಂಟಾಗಿದ್ದ ಗೊಂದಲಕ್ಕೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಇದೇ ವೇಳೆ ಎರಡೂ ಬಣಗಳ ಪ್ರತಿಭಟನೆಯಿಂದ ರಾಜಕೀಯ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ.
ಇನ್ಸ್ಪೆಕ್ಟರ್ ಧನಂಜಯ್ ಹೇಳಿದ್ದೇನು?
ಟಿ. ನರಸೀಪುರದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಇನ್ಸ್ಪೆಕ್ಟರ್ ಧನಂಜಯ್, ಗಣೇಶ ಮೆರವಣಿಗೆಯನ್ನು ಪೊಲೀಸರು ನಿಗದಿಪಡಿಸುವ ಮಾರ್ಗದಲ್ಲೇ ನಡೆಸಬೇಕು ಎಂದು ಯುವಕರಿಗೆ ಸೂಚಿಸಿದ್ದರು.
ನಿಗದಿತ ಮಾರ್ಗ ಬಿಟ್ಟು ಮಸೀದಿ ಇರುವ ರಸ್ತೆಯಲ್ಲಿ ಮೆರವಣಿಗೆ ನಡೆಸುವುದು, ಪಟಾಕಿ ಸಿಡಿಸುವುದು ಅಥವಾ ಡಿಜೆ ಹಾಕಿಕೊಂಡು ನಿಲ್ಲುವುದು ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದರು. ನಿಯಮ ಉಲ್ಲಂಘಿಸಿದರೆ ಕೇವಲ ವಾರ್ನಿಂಗ್ ನೀಡದೆ ನೇರವಾಗಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.
ಅಲ್ಲದೆ, ನಿಯಮ ಮೀರಿ ಗಲಾಟೆ ಸೃಷ್ಟಿಸಿದರೆ “ಗ್ರಹಚಾರ ಬಿಡಿಸಿಬಿಡ್ತೀನಿ, ಹೇಳಲ್ಲ ಮಾಡಿ ತೋರಿಸ್ತೀನಿ” ಎಂದು ಕಠಿಣವಾಗಿ ಎಚ್ಚರಿಕೆ ನೀಡಿದ್ದರು. ಹೀಗಾಗಿ ಇದು ವಿವಾದಕ್ಕೆ ಕಾರಣವಾಗಿದೆ.



