ವಿಜಯಸಾಕ್ಷಿ ಸುದ್ದಿ, ಗದಗ : ವಿದ್ಯಾರ್ಥಿ ಜೀವನದ ಆಧಾರದ ಮೇಲೆ ಅವರ ಭಾವೀ ಭವಿಷ್ಯ ನಿರ್ಧಾರವಾಗಲಿದ್ದು, ವಿದ್ಯಾರ್ಥಿಗಳು ಈ ಸಮಯದಲ್ಲಿ ನಿರಂತರ ಅಬ್ಯಾಸ ಮಾಡುವುದರಿಂದ ಉತ್ತಮ ಅಂಕಗಳನ್ನು ಗಳಿಸಲು ಸಾಧ್ಯವಾಗುತ್ತದೆ ಎಂದು ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಜಿಲ್ಲಾ ಅಧಿಕಾರಿ ರವಿ ಗುಂಜೀಕರ ಕಿವಿಮಾತು ಹೇಳಿದರು.
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕ ವಸತಿ ನಿಲಯದ ಬಾಲಕರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಿ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಮುದಾಯದ ಮುಖ್ಯವಾಹಿನಿಗೆ ಕರೆತರಲು ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ದೇಶ, ವಿದೇಶದಲ್ಲಿ ಉನ್ನತ ವ್ಯಾಸಂಗವನ್ನು ಪೂರೈಸುವ ಸಲುವಾಗಿ 10 ಲಕ್ಷ ರೂಗಳವರೆಗೂ ಶೈಕ್ಷಣಿಕ ಸಾಲ ನೀಡುವ ಯೋಜನೆ ಜಾರಿಯಲ್ಲಿದೆ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಐಎಎಸ್, ಕೆಎಎಸ್ ತರಬೇತಿಗಳನ್ನು ಹಿಂದುಳಿದ ವರ್ಗಗಳ ಇಲಾಖೆಯಿಂದ ನೀಡುತ್ತಿದ್ದು, ಈ ತರಬೇತಿಯ ಸದುಪಯೋಗ ಪಡೆದು ಉಜ್ವಲ ಭವಿಷ್ಯವನ್ನು ನಿರ್ಮಿಸಿಕೊಳ್ಳಿ ಎಂದರು.
ಪ್ರಾಚಾರ್ಯರಾದ ಎಮ್.ಜಿ. ಗವಾನಿ, ಜಿ.ಟಿ. ಪಾಟೀಲ್, ಜೈ ಹನುಮಾನ ಎಚ್.ಕೆ, ಡಾ. ಬಿ.ಬಿ. ಹೊಳಗುಂದಿ, ಡಾ. ವಿ.ಎ. ಹಿತ್ತಲಮನಿ, ವಸತಿ ನಿಲಯ ಮೇಲ್ವಿಚಾರಕಿ ಶೋಭಾ ಆಲೂರು, ಮಲ್ಲಿಕಾರ್ಜುನಗೌಡ ಪಾಟೀಲ್, ಅಶೋಕ ತುರಮುಂದಿ ಸಾಂದರ್ಭಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪತ್ರಕರ್ತ ಸುನೀಲಸಿಂಗ್ ಲದ್ದಿಗೇರಿ ಹಾಜರಿದ್ದರು.
ಅಧ್ಯಕ್ಷತೆ ವಹಿಸಿದ್ದ ಗದಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾಧಿಕಾರಿ ಡಾ. ಬಸವರಾಜ ಬಳ್ಳಾರಿ ಮಾತನಾಡಿ, ಹಿಂದೆ ಗುರು ಮುಂದೆ ಗುರಿಯನ್ನಿಟ್ಟುಕೊಂಡು ಮುನ್ನಡೆದರೆ ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಹರ ಮುನಿದರೂ ಗುರು ಕಾಯುವನು, ಗುರುವಿನಲ್ಲಿ ಅಷ್ಟೊಂದು ಶಕ್ತಿ ಅಡಗಿದೆ. ಗುರುವಿನೊಂದಿಗೆ ಶ್ರದ್ಧಾ-ಭಕ್ತಿಯಿಂದ ನಡೆದರೆ ಬೇಕಾದ ಸಾಧನೆ ಮಾಡಬಹುದೆನ್ನುವುದಕ್ಕೆ ಅನೇಕ ನಿದರ್ಶನಗಳಿವೆ ಎಂದರು.



