ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಹಾಜರುಪಡಿಸಿ ವಂಚಿಸಲು ಯತ್ನಿಸಿದ ಗಂಭೀರ ಆರೋಪದಡಿಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಉಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತ ಆರೋಪಿಗಳು ಎಂದು ಉಡುಪಿ ಪೊಲೀಸರು ತಿಳಿಸಿದ್ದಾರೆ.
ಪ್ರಶಾಂತ್ ಆಧಾರ್ಗೆ ಕೆ.ಟಿ. ಮೊಹಮ್ಮದ್ ಹೆಸರು ನಕಲಿ! ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನೋಮಾನ್ ಎಂಬ ಆರೋಪಿಗೆ ಜಾಮೀನು ನೀಡುವ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಜಾಮೀನುದಾರನಾಗಲು ಮುಂದಾದ ಉಮರ್ ಫಾರೂಕ್, ಪ್ರಶಾಂತ್ ಎಂಬವರ ನೈಜ ಆಧಾರ್ ಕಾರ್ಡ್ಗೆ ಕೆ.ಟಿ. ಮೊಹಮ್ಮದ್ ಎಂಬಾತನ ಹೆಸರು ಮತ್ತು ವಿಳಾಸವನ್ನು ನಕಲಿಯಾಗಿ ತಿದ್ದುಪಡಿ ಮಾಡಿ ಸೃಷ್ಟಿಸಿದ್ದನು. ತನ್ನ ಸ್ವಂತ ಲಾಭಕ್ಕಾಗಿ ಮತ್ತೊಬ್ಬ ವ್ಯಕ್ತಿಯಂತೆ ನಟಿಸಿ ಈ ನಕಲಿ ದಾಖಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಂಚಿಸಲು ಯತ್ನಿಸಿದ್ದನು.
ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್: ಕೋರ್ಟ್ಗೆ ನಕಲಿ ದಾಖಲೆ ಸಲ್ಲಿಕೆಯಾದ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಉಡುಪಿ ನಗರ ಠಾಣೆಯ ಪೊಲೀಸರು, ಪ್ರಮುಖ ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಆತನಿಗೆ ಸಹಕರಿಸಿದ ನಿಶಾಂತ್ ಕುಮಾರ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ಆದೇಶಿಸಿದೆ.



