ಬೆಂಗಳೂರು: ಬಾಗಲಕೋಟೆಯ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯೊಂದರಲ್ಲಿ ಬುಧವಾರ ತರಗತಿ ನಡೆಯುತ್ತಿದ್ದಾಗಲೇ ಕೊಠಡಿಯ ಛಾವಣಿ ಕುಸಿದುಬಿದ್ದು ಮಕ್ಕಳು ಗಾಯಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ, ಹೆಚ್ಚುವರಿ ಆಯುಕ್ತ, ಬಾಗಲಕೋಟೆ ಜಿಲ್ಲಾಧಿಕಾರಿ, ಬಾಗಲಕೋಟೆ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು (ಬಿಇಒ) ಪ್ರತಿವಾದಿಯನ್ನಾಗಿಸಿ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ಈ ಸಂಬಂಧ ಅಕ್ಟೋಬರ್ 7ರಂದು ಖುದ್ದು ಹಾಜರಾಗಿ ವರದಿ ಸಲ್ಲಿಸುವಂತೆ ಧಾರವಾಡದ ಹೆಚ್ಚುವರಿ ಆಯುಕ್ತರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಉಪ ನಿರ್ದೇಶಕರು ಹಾಗೂ ಬಿಇಒಗೆ ಲೋಕಾಯುಕ್ತರು ನಿರ್ದೇಶಿಸಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಿ, ಕಟ್ಟಡಗಳ ಸ್ಥಿತಿಗತಿ, ಸುರಕ್ಷತಾ ಮಾನದಂಡಗಳು ಮತ್ತು ಮೂಲಸೌಕರ್ಯಗಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಪೊಲೀಸರಿಗೆ ಸೂಚಿಸಿದ್ದಾರೆ.
ಬುಧವಾರ ನಡೆದ ಘಟನೆಯ ಬಳಿಕ ಬಾಗಲಕೋಟೆ ಜಿಲ್ಲಾಡಳಿತ ತ್ವರಿತ ಕ್ರಮ ಕೈಗೊಂಡಿದ್ದು, ಘಟನೆಯಲ್ಲಿ ಗಾಯಗೊಂಡಿದ್ದ 8 ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ.
ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಕಿರಿಯ ಎಂಜಿನಿಯರ್ ಅವರನ್ನು ಅಮಾನತುಗೊಳಿಸಲಾಗಿದೆ. ಅದೇ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರನ್ನು ಅಮಾನತುಗೊಳಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಬಾಗಲಕೋಟೆ ಜಿಲ್ಲಾಡಳಿತ ತಿಳಿಸಿದೆ.



